ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

Untitled design 2026 08 19T112407.402

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಹೋಟೆಲ್‌ವೊಂದರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ. ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ರಾತ್ರಿ ಸುಮಾರು 1.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಹೋಟೆಲ್‌ನಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹೋಟೆಲ್‌ನೊಳಗೆ ದಟ್ಟವಾದ ಹೊಗೆ ಆವರಿಸಿಕೊಂಡಿದ್ದರಿಂದ ಮೇಲಿನ ಮಹಡಿಗಳಲ್ಲಿದ್ದವರನ್ನು ರಕ್ಷಿಸುವುದು ಅಗ್ನಿಶಾಮಕ ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿತ್ತು. ಮೆಟ್ಟಿಲುಗಳ ಮೂಲಕ ಮೇಲಿನ ಮಹಡಿಗಳಿಗೆ ತೆರಳಲು ದಟ್ಟ ಹೊಗೆ ಅಡ್ಡಿಯಾಗಿತ್ತು.

ಹಲವರು ಹೊಗೆಯಿಂದ ಉಸಿರುಗಟ್ಟಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸುರಕ್ಷಿತವಾಗಿ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ದಟ್ಟ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿತ್ತು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಹೋಟೆಲ್‌ನಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.

ಮೃತರಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದ ಬಾಂಗ್ಲಾದೇಶದ ನಾಗರಿಕರೂ ಇದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಮೃತಪಟ್ಟವರ ಸಂಪೂರ್ಣ ಗುರುತು ಮತ್ತು ವಿವರಗಳನ್ನು ಅಧಿಕಾರಿಗಳು ಇನ್ನಷ್ಟೇ ಬಹಿರಂಗಪಡಿಸಬೇಕಿದೆ.

ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಸೇರಿದಂತೆ ಹಲವು ಸಾಧ್ಯತೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಅಗ್ನಿ ಅವಘಡಕ್ಕೆ ಕಾರಣ ಮತ್ತು ಹೋಟೆಲ್‌ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಎರಡು ದಿನಗಳ ಹಿಂದೆಯೂ ಭೀಕರ ಅಗ್ನಿ ದುರಂತ

ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮತ್ತೊಂದು ಭೀಕರ ಹೋಟೆಲ್ ಅಗ್ನಿ ಅವಘಡ ಸಂಭವಿಸಿತ್ತು. ಬಿರ್ಭುಮ್ ಜಿಲ್ಲೆಯ ಪ್ರಸಿದ್ಧ ದೇವಾಲಯ ಪಟ್ಟಣವಾದ ತಾರಾಪಿತ್‌ನ ಹೋಟೆಲ್ ಬಿದೇಶಿನಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 9 ಮಂದಿ ಮೃತಪಟ್ಟಿದ್ದರು.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಬಳಿಕ ದಟ್ಟ ಹೊಗೆ ಆವರಿಸಿದ್ದರಿಂದ ಹಲವು ಮಂದಿ ಒಳಗೆ ಸಿಲುಕಿಕೊಂಡಿದ್ದರು. ಈ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ತಾರಾಪಿತ್ ದೇವಾಲಯದ ಸುತ್ತಮುತ್ತಲಿನ 15 ಹೋಟೆಲ್‌ಗಳನ್ನು ಅನಿರ್ದಿಷ್ಟಾವಧಿಗೆ ಮುಚ್ಚುವಂತೆ ಆದೇಶಿಸಿತ್ತು.

ಈ ಪ್ರಕರಣದಲ್ಲಿ ಹೋಟೆಲ್‌ನ ಮುಖ್ಯ ಮಾಲೀಕ ಪ್ರೊಬಿಟ್ ಪಾಲ್ ಹಾಗೂ ಅವರ ಪುತ್ರ ಮತ್ತು ಸಹ-ಮಾಲೀಕ ಕಲ್ಯಾಣ್ ಪಾಲ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕೋಲ್ಕತ್ತಾದಲ್ಲಿ ನಡೆದಿರುವ ಮತ್ತೊಂದು ಹೋಟೆಲ್ ಅಗ್ನಿ ಅವಘಡವು ಪಶ್ಚಿಮ ಬಂಗಾಳದ ಹೋಟೆಲ್‌ಗಳಲ್ಲಿನ ಅಗ್ನಿ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Exit mobile version