ಕೋಚಿಂಗ್ ಸೆಂಟರ್ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Untitled design 2026 06 22T200638.505

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಕೋಚಿಂಗ್ ಸೆಂಟರ್ ಕಟ್ಟಡದಲ್ಲಿ ಸೋಮವಾರ (ಜೂನ್ 23) ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ಹರಡಿತು. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹೇಗಾಯಿತು ದುರಂತ?

ಮೂರು ಅಂತಸ್ತಿನ ಈ ಕಟ್ಟಡದಲ್ಲಿ ತರಬೇತಿ ಕೇಂದ್ರವಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಮೇಲಿನ ಮಹಡಿಯಿಂದ ಕೆಳಗಿನವರೆಗೂ ವ್ಯಾಪಿಸಿತು. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದೊಳಗೆ ಸಿಲುಕಿಕೊಂಡ ವಿದ್ಯಾರ್ಥಿಗಳು ಪ್ರಾಣ ಉಳಿಸಲು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಆದರೆ 14 ಮಂದಿ ಸಜೀವ ದಹನವಾಗಿದ್ದರು. ಹಲವಾರು ಮಂದಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಧಾನಿ ಮೋದಿ ಸಂತಾಪ

ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿ, “ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಾಗಿದ್ದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಪ್ರಧಾನಿ ಮೋದಿ ಅವರು ಮೃತರ ಪ್ರತಿ ಕುಟುಂಬಕ್ಕೂ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ದುರಂತಕ್ಕೆ ಸಂತಾಪ ಸೂಚಿಸಿದ್ದು, ತಮ್ಮ ಅಲಿಗಢ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ, “ಲಕ್ನೋದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಭೇಟಿ

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಲ್ಲಿ ವಿಚಾರಿಸಿದ್ದಾರೆ. ಘಟನೆಯ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Exit mobile version