ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ ರಾವ್ ಕೊಕಟೆ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ತನ್ನ ಮೊಬೈಲ್ ಫೋನ್ನಲ್ಲಿ “ಜಂಗ್ಲಿ ರಮ್ಮಿ” ಆಟವಾಡುತ್ತಿದ್ದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳಿಂದ ಸಚಿವರ ವಿರುದ್ಧ ತೀವ್ರ ಟೀಕೆಗಳು ಕೇಳಿಬಂದಿವೆ.
ಶರದ್ ಪವಾರ್ ಬಣದ ಎನ್ಸಿಪಿ (ಎಸ್ಪಿ) ನಾಯಕ ರೋಹಿತ್ ಪವಾರ್ ಅವರು ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಕೃಷಿ ಕ್ಷೇತ್ರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. “ರಾಜ್ಯದಲ್ಲಿ ಪ್ರತಿದಿನ ಸರಾಸರಿ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಕೃಷಿ ಸಚಿವರು ಜವಾಬ್ದಾರಿಯಿಂದ ಕೆಲಸ ಮಾಡುವ ಬದಲು ವಿಧಾನಸಭೆಯಲ್ಲಿ ರಮ್ಮಿ ಆಡುವಲ್ಲಿ ತೊಡಗಿದ್ದಾರೆ,” ಎಂದು ರೋಹಿತ್ ಪವಾರ್ ತಮ್ಮ ಪೋಸ್ಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಸಚಿವರ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. “ರಾಜ್ಯದ ರೈತರು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿ ಸಚಿವರು ರಮ್ಮಿ ಆಡುವುದು ರಾಜ್ಯದ ರೈತರಿಗೆ ಮಾಡಿರುವ ಅವಮಾನವಾಗಿದೆ,” ಎಂದು ಅವರು ಹೇಳಿದ್ದಾರೆ. ಮಹಾಯುತಿ ಸರಕಾರ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ವಡೆಟ್ಟಿವಾರ್, ಸರಕಾರದ ಈ ನಿರ್ಲಕ್ಷ್ಯದ ಧೋರಣೆಯಿಂದ ರೈತರು ವಂಚನೆಗೊಳಗಾಗುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
“#जंगली_रमी_पे_आओ_ना_महाराज…!”
सत्तेतल्या राष्ट्रवादी गटाला भाजपला विचारल्याशिवाय काहीच करता येत नाही म्हणूनच शेतीचे असंख्य प्रश्न प्रलंबित असताना, राज्यात रोज ८ शेतकरी आत्महत्या करत असताना सुद्धा काही कामच नसल्याने कृषिमंत्र्यांवर रमी खेळण्याची वेळ येत असावी.
रस्ता भरकटलेल्या… pic.twitter.com/52jz7eTAtq
— Rohit Pawar (@RRPSpeaks) July 20, 2025
ಎನ್ಸಿಪಿ (ಎಸ್ಪಿ) ಸಂಸದೆ ಸುಪ್ರಿಯಾ ಸುಳೆ ಈ ಘಟನೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಕೃಷಿ ಸಚಿವರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವ ಬದಲು, ವಿಧಾನಸಭೆಯಂತಹ ಗಂಭೀರ ವೇದಿಕೆಯಲ್ಲಿ ರಮ್ಮಿ ಆಡುತ್ತಿರುವುದು ರಾಜ್ಯದ ಜನತೆಗೆ ಮಾಡಿರುವ ಅಗೌರವವಾಗಿದೆ. ರೈತರ ಸಮಸ್ಯೆಗಳಿಗೆ ಸೂಕ್ತ ಗಮನ ನೀಡದಿರುವ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕೃಷಿ ಕ್ಷೇತ್ರವು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಬೆಳೆ ವಿಮೆ, ಕಡಿಮೆ ಬೆಂಬಲ ಬೆಲೆ, ರೈತರ ಸಾಲದ ಒತ್ತಡ, ಮತ್ತು ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಸರಕಾರದ ವೈಫಲ್ಯದ ಬಗ್ಗೆ ಈಗಾಗಲೇ ಟೀಕೆಗಳು ಕೇಳಿಬಂದಿವೆ.