ಪಶ್ಚಿಮ ಬಂಗಾಳದಲ್ಲಿ ನಾವು ಸೋತಿಲ್ಲ,ರಾಜೀನಾಮೆ ನೀಡೋ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಬ್ಬರದ ಗೆಲುವು ಸಾಧಿಸಿದೆ. ತೃಣಮೂಲ್ ಕಾಂಗ್ರೆಸ್ (ಟಿಎಂಸಿ) ಧೂಳೀಪಟವಾಗಿದೆ. ಆದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದೆಗುಂದಿಲ್ಲ. ಬದಲಿಗೆ, ಅವರು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸುತ್ತಾ, ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. “ನಾವು ಸೋತಿಲ್ಲ, ಹಾಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ” ಎಂಬ ನಿಲುವನ್ನು ಅವರು ಸ್ಪಷ್ಟಪಡಿಸಿದ್ದಾರೆ. 

ಕೊಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, “ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ, ನಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೆ. ಆದರೆ, ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಸಿಎಂ ಪದವಿಗೆ ರಾಜೀನಾಮೆ ನೀಡುವುದಿಲ್ಲ” ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಪೋಸ್ಟಲ್ ಬ್ಯಾಲೆಟ್, ವಿವಿಪಿಎಟಿ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲೇ ಮೋಸ ನಡೆದಿದೆ. “ಮರು ಮತ ಎಣಿಕೆ ಆಗಬೇಕು. ಅಲ್ಲಿಯವರೆಗೆ ನಾನು ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತೇನೆ” ಎಂದು ಅವರು ಪಟ್ಟು ಹಿಡಿದಿದ್ದಾರೆ.

ಸಾಮಾನ್ಯವಾಗಿ ಯಾವುದೇ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಬೀತುಪಡಿಸಲಾಗದ ಪಕ್ಷದ ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಬೇಕೆಂಬ ನಿಯಮವಿದೆ. ಆದರೆ, ಮಮತಾ ಅವರು ತಾವು ಬಹುಮತ ಕಳೆದುಕೊಂಡಿರುವುದನ್ನು ಸ್ಪಷ್ಟಪಡಿಸಿಲ್ಲ. ಇದೀಗ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚನೆಗೆ ಹಕ್ಕು ಸಲ್ಲಿಸಿದೆ. ಆದರೆ, ಮಮತಾ ರಾಜೀನಾಮೆ ನಿರಾಕರಿಸುತ್ತಿರುವ ಕಾರಣ ರಾಜ್ಯಪಾಲರ ಮುಂದೆ ದೊಡ್ಡ ಸವಾಲು ಎದುರಾಗಿದೆ.

ಬಿಜೆಪಿ ಮುಖಂಡರು ಮಮತಾ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸೋತ ನಂತರ ಮರು ಎಣಿಕೆ ಆಗಬೇಕು ಎನ್ನುವುದು ಮಕ್ಕಳ ತರ್ಕದಂತಿದೆ. ಜನತೆ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಮಮತಾ ರಾಜೀನಾಮೆ ಕೊಡದಿದ್ದರೆ, ಬಂಗಾಳದ ಜನರೇ ಅವರ ವಿರುದ್ಧ ಸ್ವರ ಎತ್ತುತ್ತಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

Exit mobile version