ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸುತ್ತಿದ್ದಾರೆ.
ಶ್ರೀರಾಘವೇಂದ್ರ ಸ್ವಾಮಿಗಳು 700 ವರ್ಷಗಳ ಕಾಲ ವೃಂದಾವನದಲ್ಲಿದ್ದು ಭಕ್ತರಿಗೆ ಅನುಗ್ರಹ ನೀಡುತ್ತಾರೆ ಎಂಬ ಪ್ರತೀತಿ ಇದೆ. ಅವರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆ ಎಂದು ಆಚರಿಸಲಾಗುತ್ತದೆ. ಮಂತ್ರಾಲಯ ಸೇರಿದಂತೆ ದೇಶದ ವಿವಿಧ ರಾಯರ ಮಠಗಳಲ್ಲಿ ಈ ದಿನವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ.
ಪೂರ್ವಾರಾಧನೆಯ ಅಂಗವಾಗಿ ಬೆಳಗ್ಗೆಯಿಂದಲೇ ಮಂತ್ರಾಲಯ ಮಠದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿವೆ. ನಿರ್ಮಾಲ್ಯ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ ಹಾಗೂ ರಜತ ಸಿಂಹವಾಹನೋತ್ಸವ ಸೇರಿದಂತೆ ಹಲವು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಶ್ರೀರಂಗನಾಥ ದೇವಾಲಯದಿಂದ ರಾಯರಿಗೆ ವಿಶೇಷ ಪ್ರಸಾದ
ತಮಿಳುನಾಡು ಸರ್ಕಾರದ ನಿರ್ದೇಶನದ ಮೇರೆಗೆ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಾಲಯದಿಂದ ವಸ್ತ್ರ ರೂಪದ ಪ್ರಸಾದವನ್ನು ಮಂತ್ರಾಲಯಕ್ಕೆ ತಂದಿದ್ದು, ಅದನ್ನು ಶ್ರೀಗುರು ರಾಘವೇಂದ್ರ ಸ್ವಾಮಿಗಳಿಗೆ ಅರ್ಪಿಸಿದರು. ಈ ವಿಶೇಷ ಸೇವೆ ಆರಾಧನಾ ಮಹೋತ್ಸವದ ಧಾರ್ಮಿಕ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
ಇದೇ ವೇಳೆ, ರಾಘವೇಂದ್ರ ಸ್ವಾಮಿಗಳು ರಚಿಸಿರುವ ‘ಪರಿಮಳ’ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ಭಕ್ತರು ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.
ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ಆಗಮನ
ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಭಜನಾ ಮಂಡಳಿಗಳ ನೂರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರಿಗೆ ಭಜನೆ ಹಾಗೂ ವಿವಿಧ ಸೇವೆಗಳನ್ನು ಸಮರ್ಪಿಸಿದರು. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಮಂತ್ರಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಆರಾಧನಾ ಮಹೋತ್ಸವದ ಮೂರು ದಿನಗಳು ಅತ್ಯಂತ ಮಹತ್ವದ್ದಾಗಿದ್ದು, ಈ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಲವು ವರ್ಷಗಳಿಂದ ಆರಾಧನಾ ಮಹೋತ್ಸವಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಈ ಬಾರಿ ಮಂತ್ರಾಲಯಕ್ಕೆ ಆಗಮಿಸಿರುವುದು ತಮ್ಮ ಪುಣ್ಯ ಎಂದು ಕೆಲ ಭಕ್ತರು ಸಂತಸ ಹಂಚಿಕೊಂಡರು.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ರಾಘವೇಂದ್ರಾನುಗ್ರಹ ಪ್ರಶಸ್ತಿ
ಇಂದು ಸಂಜೆ ಮಠದ ಪ್ರಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ‘ರಾಘವೇಂದ್ರಾನುಗ್ರಹ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುತ್ತದೆ.
ರಾಯರ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಭಕ್ತಿ, ಧಾರ್ಮಿಕ ಆಚರಣೆ ಹಾಗೂ ಸಾಂಸ್ಕೃತಿಕ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.





