ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಅದರ ನಡುವೆ ಮಾನಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಳೆ ಆರ್ಭಟ, ಬಿರುಗಾಳಿ ಹಾಗೂ ನಿರಂತರ ಅವಘಡಗಳ ನಡುವೆಯೇ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ.
ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಅಧಿಕಾರಿಗಳ ಪ್ರಕಾರ, ಮಾನಖುರ್ದ್ನ ಮಂಡಲ ಪ್ರದೇಶದ ಹನುಮಾನ್ ಮಂದಿರದ ಹಿಂಭಾಗದಲ್ಲಿರುವ ಜನತಾ ನಗರದಲ್ಲಿ ರಾತ್ರಿ ಸುಮಾರು 8.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದ ಭಾಗವಾಗಿದ್ದ ಎರಡು-ಮೂರು ವಸತಿ ಮನೆಗಳು ಏಕಾಏಕಿ ಕುಸಿದು ಬಿದ್ದ ಪರಿಣಾಮ ಜನರು ಅವಶೇಷಗಳಡಿ ಸಿಲುಕಿದರು. ತಕ್ಷಣವೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು, ಬಿಎಂಸಿ ವಾರ್ಡ್ ಸಿಬ್ಬಂದಿ ಹಾಗೂ ‘108’ ಆಂಬ್ಯುಲೆನ್ಸ್ ತಂಡಗಳು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿವೆ.
ರಕ್ಷಣಾ ಕಾರ್ಯಾಚರಣೆಯ ವೇಳೆ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಶತಾಬ್ಧಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ರಾಜವಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ ಆರುಕ್ಕೆ ಏರಿದೆ. ಓರ್ವ ಗಾಯಾಳುವಿಗೆ ರಾಜವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್ ತಂಡವೂ ಆಗಮಿಸಿದ್ದು, ಅವಶೇಷಗಳಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.
ಇನ್ನೊಂದೆಡೆ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈ, ಥಾಣೆ, ರತ್ನಗಿರಿ ಹಾಗೂ ರಾಯಗಡ ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಕಳೆದ 24 ಗಂಟೆಗಳಲ್ಲಿ ಗ್ರೇಟರ್ ಮುಂಬೈ ಮತ್ತು ಉಪನಗರಗಳಲ್ಲಿ 150ರಿಂದ 170 ಮಿಮೀ ಮಳೆಯಾಗಿದೆ. ಗಂಟೆಗೆ 72ರಿಂದ 75 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿರುವುದರಿಂದ ನಗರದ ವಿವಿಧ ಭಾಗಗಳಲ್ಲಿ 142 ಮರಗಳು ಬಿದ್ದಿರುವ ಘಟನೆಗಳು ವರದಿಯಾಗಿವೆ. ಕುರ್ಲಾ ಕಮಾನಿಯ ಗೋಮ್ಸ್ ಟೌನ್ ಪ್ರದೇಶದಲ್ಲಿ ಮರವೊಂದು ಬಿದ್ದು 63 ವರ್ಷದ ವ್ಯಕ್ತಿ ಮೃತಪಟ್ಟಿದ್ದರೆ, ಆರೆ ಕಾಲೋನಿಯಲ್ಲಿ 18 ವರ್ಷದ ಯುವಕನೊಬ್ಬ ಮರ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.
ರತ್ನಗಿರಿ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಜಗಬುಡಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ವಶಿಷ್ಠಿ ನದಿಯೂ ಎಚ್ಚರಿಕೆಯ ಮಟ್ಟ ದಾಟಿದ್ದು, ಪ್ರವಾಹ ಭೀತಿ ಎದುರಾಗಿದೆ. ಥಾಣೆ ಜಿಲ್ಲೆಯಲ್ಲಿ ಕೂಡ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಜಿಲ್ಲಾಡಳಿತ ತುರ್ತು ಪ್ರತಿಕ್ರಿಯೆಗಾಗಿ ಎಲ್ಲಾ ಇಲಾಖೆಗಳು ಸಜ್ಜಾಗಿರಲು ಸೂಚಿಸಿದೆ. ನಾಗರಿಕರು ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಆಡಳಿತ ಮನವಿ ಮಾಡಿದೆ.





