ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ, ವಾಹನ ಸಂಚಾರ ಕುಂಠಿತಗೊಂಡಿದೆ, ರೈಲು ಸೇವೆಗಳು ಅಸ್ತವ್ಯಸ್ತವಾಗಿವೆ.
ಈ ನಡುವೆ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿ ಮೃತಪಟ್ಟಿದ್ದಾನೆ. ಮಳೆಯ ನೀರಿನಿಂದ ಉಕ್ಕಿ ಹರಿಯುತ್ತಿದ್ದ ಚರಂಡಿ ಸಮೀಪ ಬಾಲಕ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಳೆಯಲ್ಲಿ ಸಿಲುಕಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಅವನನ್ನು ರಕ್ಷಿಸಲು ಹರಸಾಹಸ ಪಟ್ಟರೂ, ನೀರಿನ ರಭಸ ಅತಿಯಾದ ಕಾರಣ ಬಾಲಕನನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಳಿಕ ಬಾಲಕನ ಶವವನ್ನು ಪತ್ತೆಹಚ್ಚಲಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಅನೇಕ ಅವಾಂತರಗಳು ಸಂಭವಿಸಿವೆ. ಮುಂಬೈ ನಗರದಲ್ಲೇ ಕಳೆದ ಆರು ದಿನಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 10 ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ಭಾರೀ ಮಳೆಯಿಂದ ಕಟ್ಟಡ ಕುಸಿತ, ಮರಗಳು ಉರುಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು, ವಿದ್ಯುತ್ ವ್ಯತ್ಯಯ ಮತ್ತು ಸಂಚಾರ ದಟ್ಟಣೆ ಸಮಸ್ಯೆಗಳು ವ್ಯಾಪಕವಾಗಿ ಕಂಡುಬರುತ್ತಿವೆ. ನಗರದ ಹಲವೆಡೆ ತಗ್ಗು ಪ್ರದೇಶಗಳು ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಮನೆಗಳಿಗೆ ನೀರು ನುಗ್ಗಿದ ಘಟನೆಗಳೂ ವರದಿಯಾಗಿವೆ.
ಮಳೆಯ ಹೊಡೆತಕ್ಕೆ ರೈಲು ಸಂಚಾರವೂ ತೀವ್ರವಾಗಿ ಹದಗೆಟ್ಟಿದೆ. ಮುಂಬೈನ ಜೀವನಾಡಿಯಾಗಿರುವ ಉಪನಗರ ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇಂದು ಕೂಡ ಸೆಂಟ್ರಲ್ ಮತ್ತು ವೆಸ್ಟರ್ನ್ ರೈಲ್ವೆ ವ್ಯಾಪ್ತಿಯ 200ಕ್ಕೂ ಹೆಚ್ಚು ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಇದರ ಜೊತೆಗೆ ಒಟ್ಟು 43 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ ಸೆಂಟ್ರಲ್ ರೈಲ್ವೆಯ 27 ಹಾಗೂ ವೆಸ್ಟರ್ನ್ ರೈಲ್ವೆಯ 16 ರೈಲುಗಳು ಸೇರಿವೆ. ಹೀಗಾಗಿ ಕೆಲಸಕ್ಕೆ ತೆರಳುವ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನೊಂದೆಡೆ ಲೋನಾವಾಲಾ–ಕರ್ಜತ್ ಘಾಟ್ ವಿಭಾಗದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ರೈಲು ಸಂಚಾರಕ್ಕೆ ಮತ್ತಷ್ಟು ಅಡ್ಡಿ ಉಂಟಾಗಿದೆ. ಹಳಿಗಳ ಮೇಲೆ ಮಣ್ಣು ಮತ್ತು ಕಲ್ಲುಗಳು ಜಾರಿಬಿದ್ದ ಪರಿಣಾಮ ಕೆಲ ಮಾರ್ಗಗಳಲ್ಲಿ ರೈಲು ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ರೈಲ್ವೆ ಇಲಾಖೆ ತುರ್ತು ದುರಸ್ತಿ ಕಾರ್ಯ ಕೈಗೊಂಡಿದ್ದರೂ, ಹವಾಮಾನ ವೈಪರಿತ್ಯದಿಂದ ಸೇವೆಗಳನ್ನು ಸಂಪೂರ್ಣವಾಗಿ ಸಹಜ ಸ್ಥಿತಿಗೆ ತರುವುದು ಸವಾಲಾಗಿದೆ.
ಪಾಲ್ಘರ್ ಜಿಲ್ಲೆಯಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಜಿಲ್ಲೆಯಲ್ಲಿ 300 ಮಿಲಿಮೀಟರ್ಗಿಂತ ಹೆಚ್ಚು ಮಳೆಯಾಗಿದ್ದು, ನಲಸೋಪಾರಾ ಸೇರಿದಂತೆ ಹಲವೆಡೆ ಭಾರೀ ಜಲಾವೃತ ಉಂಟಾಗಿದೆ. ಮನೆಗಳು, ಅಂಗಡಿಗಳು ಹಾಗೂ ರಸ್ತೆಗಳಲ್ಲಿ ನೀರು ನಿಂತಿದ್ದು, ಸ್ಥಳೀಯರು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಪರಿಣಾಮವಾಗಿ ವಸಾಯಿ ಮತ್ತು ವಿರಾರ್ ನಡುವಿನ ಉಪನಗರ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಾವಿರಾರು ಪ್ರಯಾಣಿಕರು ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದು, ಜನರ ಸಂಚಾರಕ್ಕೆ ದೊಡ್ಡ ಅಡಚಣೆ ಉಂಟಾಗಿದೆ.
ಹವಾಮಾನ ಇಲಾಖೆ ಮುಂದಿನ ಕೆಲ ದಿನಗಳಿಗೂ ಮಹಾರಾಷ್ಟ್ರದ ಕರಾವಳಿ ಮತ್ತು ನಗರ ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ, ಅಗತ್ಯವಿಲ್ಲದ ಹೊರ ಸಂಚಾರ ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.





