NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

ಟಿ (1)

ನವದೆಹಲಿ, ಜುಲೈ 23: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳ ವಿರುದ್ಧದ ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದೆ. ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರ ಮೇಲೆ ಪೊಲೀಸರು ಕೈಗೊಂಡ ಕ್ರಮವನ್ನು ಖಂಡಿಸಿ, ಸುಪ್ರೀಂ ಕೋರ್ಟ್‌ನ ಹಲವು ವಕೀಲರು ಸಂವಿಧಾನದ ಪ್ರಸ್ತಾವನೆಯನ್ನು ಸಾರ್ವಜನಿಕವಾಗಿ ಓದುವ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ. ಇದರ ನಡುವೆಯೇ ಕಾನೂನು ವಲಯದ ಪ್ರತಿನಿಧಿಗಳು ಮಧ್ಯಪ್ರವೇಶಿಸಿದ್ದು, ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಸಂವಿಧಾನಬದ್ಧ ಹಕ್ಕು ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲರು ಒಗ್ಗೂಡಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವ ಮೂಲಕ ಪ್ರಜಾಪ್ರಭುತ್ವ, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ನೆನಪಿಸಿದರು. ಯಾವುದೇ ಸರ್ಕಾರ ಅಥವಾ ಆಡಳಿತವು ಶಾಂತಿಯುತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ನಾಗರಿಕರ ಹಕ್ಕುಗಳನ್ನು ನಿರ್ಬಂಧಿಸಬಾರದು ಎಂದು ಅವರು ಅಭಿಪ್ರಾಯಪಟ್ಟರು.

ವಕೀಲರು ಹೇಳುವ ಪ್ರಕಾರ, ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಜನರು ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಸರ್ಕಾರದ ಮುಂದೆ ಮಂಡಿಸುವ ಹಕ್ಕನ್ನು ಸಂವಿಧಾನವೇ ನೀಡಿದೆ. ಪ್ರತಿಭಟನೆಯನ್ನು ನಿಯಂತ್ರಿಸುವ ಹೆಸರಿನಲ್ಲಿ ಅತಿಯಾದ ಬಲಪ್ರಯೋಗ ನಡೆಸುವುದು ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆಯಾಗುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ, ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ಮುಂದಾಗಿದೆ. ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸರ್ಕಾರವು ಈಗಾಗಲೇ ನಾಲ್ಕು ಬಾರಿ ಅಧಿಕೃತವಾಗಿ ಮಾತುಕತೆಗೆ ಆಹ್ವಾನ ನೀಡಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿನಿಧಿಗಳು ಯಾವುದೇ ಸಮಯದಲ್ಲಿ ಚರ್ಚೆಗೆ ಬರಬಹುದು ಎಂದು ಅವರು ಹೇಳಿದ್ದಾರೆ.

ಬುಧವಾರ ಮಧ್ಯಾಹ್ನದಿಂದಲೇ ಸಿಜೆಪಿ ಪ್ರತಿನಿಧಿಗಳಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗಿದ್ದು, ಅವರ ಅನುಕೂಲಕ್ಕೆ ತಕ್ಕಂತೆ ಸಭೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ಕಚೇರಿ ಅಥವಾ ನಿವಾಸದಲ್ಲಿ ಸಭೆ ನಡೆಸಲು ಸಹ ಸರ್ಕಾರ ಸಮ್ಮತಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.

“ಇದನ್ನು ನಾವು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಪರಿಗಣಿಸಿಲ್ಲ. ವಿದ್ಯಾರ್ಥಿಗಳ ಹಿತವೇ ಸರ್ಕಾರದ ಆದ್ಯತೆ. ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ನಾನು ಸ್ವತಃ ಮಾತುಕತೆಯಲ್ಲಿ ಭಾಗವಹಿಸುತ್ತೇವೆ. ಸಮಾಲೋಚನೆಯ ಮೂಲಕವೇ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ವಿಶ್ವಾಸ ನಮಗಿದೆ” ಎಂದು ಜಿತೇಂದ್ರ ಸಿಂಗ್ ಹೇಳಿದರು.

ವಿದ್ಯಾರ್ಥಿಗಳ ಆತಂಕ, ಪರೀಕ್ಷೆಯ ಪಾರದರ್ಶಕತೆ ಹಾಗೂ ಭವಿಷ್ಯದ ಕುರಿತು ಉದ್ಭವಿಸಿರುವ ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಂಘರ್ಷದ ಬದಲು ಸಂವಾದದ ಮೂಲಕ ಸಮಸ್ಯೆ ಬಗೆಹರಿಸುವುದು ಉತ್ತಮ ಮಾರ್ಗ ಎಂದು ಸರ್ಕಾರದ ನಿಲುವು ಎಂದು ವಿವರಿಸಿದರು.

Exit mobile version