ಕಠ್ಮಂಡು ಆ. 26: ನೇಪಾಳದಲ್ಲಿ ಭೋಟೆ ಕೋಶಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಪರಿಣಾಮ ನುವಾಕೋಟ್, ಧಾದಿಂಗ್ ಮತ್ತು ರಸುವಾ ಜಿಲ್ಲೆಗಳ ಹಲವು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ದಿಢೀರ್ ಪ್ರವಾಹಕ್ಕೆ ಕನಿಷ್ಠ 95 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೇಪಾಳದಲ್ಲಿರುವ ಭಾರತೀಯರ ನೆರವಿಗಾಗಿ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
Updated emergency helpline numbers for contacting the Embassy of India in Kathmandu:
+977 985 131 6807
+977 970 910 7500
+977 981 032 6117
(These emergency numbers can also be contacted through WhatsApp)@MEAIndia https://t.co/sxmJALcbAL
— IndiaInNepal (@IndiaInNepal) August 26, 2026
ಬುಧವಾರ ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿದೆ. ಚೀನಾ ಗಡಿ ಭಾಗದಿಂದ ಭಾರೀ ಪ್ರಮಾಣದ ನೀರು ಹರಿದು ಬಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದ ರಭಸಕ್ಕೆ ರಸುವಾ ಜಿಲ್ಲೆಯ ಟಿಮುರೆ ಮತ್ತು ಸ್ಯಾಫ್ರುಬೇಸಿ ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿವೆ.
142 ಭಾರತೀಯರು ನಾಪತ್ತೆ
ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಾಥಮಿಕ ಮಾಹಿತಿಯಂತೆ, ಪ್ರವಾಹದ ಬಳಿಕ ಒಟ್ಟು 384 ಪ್ರವಾಸಿಗರು ಹಾಗೂ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಇವರಲ್ಲಿ 142 ಭಾರತೀಯ ಪ್ರಜೆಗಳು ಹಾಗೂ 37 ಎನ್ಆರ್ಐಗಳು ಸೇರಿದ್ದಾರೆ ಎಂದು ವರದಿಯಾಗಿದೆ.
ನಾಪತ್ತೆಯಾಗಿರುವ ಭಾರತೀಯರ ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಮಾಹಿತಿ ಪಡೆಯಲು ಮತ್ತು ಅಗತ್ಯ ನೆರವು ಪಡೆಯಲು ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿರುವ ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ಮನವಿ ಮಾಡಿದೆ.
ಇನ್ನು ರಸುವಾ ಜಿಲ್ಲೆಯ ಟಿಮುರೆ ಗಡಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ 9 ಮಂದಿ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇತರ ಭದ್ರತಾ ಸಿಬ್ಬಂದಿಯ ಸ್ಥಿತಿಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.
60ಕ್ಕೂ ಹೆಚ್ಚು ಮನೆಗಳು ಕೊಚ್ಚಿಹೋಗಿವೆ
ಪ್ರವಾಹದ ಅಬ್ಬರಕ್ಕೆ ತ್ರಿಶೂಲಿ ಬಜಾರ್ ಸಮೀಪದ ಸುಮಾರು 60ಕ್ಕೂ ಹೆಚ್ಚು ಮನೆಗಳು ಕೊಚ್ಚಿಹೋಗಿವೆ. ತ್ರಿಶೂಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಎರಡು ಸೇತುವೆಗಳಿಗೂ ಹಾನಿಯಾಗಿದೆ. ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಸಂಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ.
ರಸುವಾಗಢಿ, ಚಿಲಿಮೆ, ತ್ರಿಶೂಲಿ-3ಎ ಹಾಗೂ ದೇವಿಘಾಟ್ ಸೇರಿದಂತೆ ಹಲವು ಜಲವಿದ್ಯುತ್ ಮತ್ತು ವಿದ್ಯುತ್ ಪ್ರಸರಣ ಘಟಕಗಳು ಪ್ರವಾಹದಿಂದ ಹಾನಿಗೊಳಗಾಗಿವೆ. ಇದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ.
ಶೋಧ ಕಾರ್ಯ ಮುಂದುವರಿಕೆ
ಈವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ಪ್ರವಾಹದ ತೀವ್ರತೆ ಹಾಗೂ ದುರ್ಗಮ ಭೌಗೋಳಿಕ ಪರಿಸ್ಥಿತಿಯಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿದೆ.
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮುನ್ನೆಚ್ಚರಿಕೆ ಕ್ರಮ
ಈ ಪ್ರವಾಹದ ಹಿನ್ನಲೆಯಲ್ಲಿ ಭಾರತದ ಗಡಿ ಭಾಗದ ನದಿಯ ನೀರಿನ ಮಟ್ಟ ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕಾರಣದಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಭಾರತೀಯರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಭಾರತೀಯ ರಾಯಭಾರ ಕಚೇರಿ ನೇಪಾಳದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಪರಿಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
