ಹೆಹಲಿ, (ಜೂನ್ 20): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ದೇಶದ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗಳಿಗೆ ತಲಾ ₹2,000 ರೂಪಾಯಿಗಳಂತೆ ಒಟ್ಟು ₹18,880 ಕೋಟಿ ರೂ. ಹಣ ನೇರವಾಗಿ ಜಮೆಯಾಗಲಿದೆ.
PM-KISAN ಯೋಜನೆಯ 23ನೇ ಕಂತು ಇಂದು ಬಿಡುಗಡೆ
2,000ರೂ ಗಳಂತೆ ಒಟ್ಟು18,880 ಕೋಟಿ ರೂ ಹಣ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗೆ ಜಮೆ
ಪಶ್ಚಿಮ ಬಂಗಾಳದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು ₹907 ಕೋಟಿ ಹಣ
ಕೃಷಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಇಂದು ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಮಧ್ಯಾಹ್ನ ಸುಮಾರು 3:45ಕ್ಕೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವು ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತಿನ ಹಣವನ್ನು ಸಹ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಪಿಎಂ ಕಿಸಾನ್ ಯೋಜನೆಯಡಿ ದೇಶಾದ್ಯಂತ ಕೋಟ್ಯಂತರ ರೈತರಿಗೆ ನೇರ ಆರ್ಥಿಕ ನೆರವು ದೊರೆಯಲಿದೆ. ಪಶ್ಚಿಮ ಬಂಗಾಳದ ಸುಮಾರು 50 ಲಕ್ಷ ರೈತರು ಈ ಬಾರಿ ಫಲಾನುಭವಿಗಳಾಗಿದ್ದು, ಪ್ರತಿಯೊಬ್ಬ ರೈತನ ಖಾತೆಗೆ ₹2,000 ರೂಪಾಯಿ ಜಮೆಯಾಗಲಿದೆ. ರಾಜ್ಯದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು ₹907 ಕೋಟಿ ರೂ. ಹಣ ತಲುಪಲಿದೆ ಎಂದು ಮಾಹಿತಿ ನೀಡಲಾಗಿದೆ.
ತಾರಕೇಶ್ವರ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಬಂಗಾಳದ ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ.
ಪ್ರಧಾನಮಂತ್ರಿಯವರ ಅಧಿಕೃತ ಎಕ್ಸ್ ಖಾತೆಯಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
ರೈತರ ಆದಾಯ ಹೆಚ್ಚಿಸುವುದು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಿಸುವುದು ಮತ್ತು ಪ್ರಕೃತಿ ಸ್ನೇಹಿ ಕೃಷಿಗೆ ಉತ್ತೇಜನ ನೀಡುವುದು ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ.
ತಾರಕೇಶ್ವರ ಪ್ರದೇಶವು ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ಬಂಗಾಳದ ಪರಂಪರೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.
ಪಿಎಂ-ಕಿಸಾನ್ ಯೋಜನೆಯ ಮೂಲಕ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸುವ ಇದರ ಪ್ರಮುಖ ಉದ್ದೇಶ.





