ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಾಳೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ತುರ್ತು ಸಭೆಯನ್ನು ಕರೆಯಲಾಗಿದೆ. ದೇಶದ ಆರ್ಥಿಕತೆ ಮತ್ತು ಅಗತ್ಯ ವಸ್ತುಗಳ ಪೂರೈಕೆ ಮೇಲೆ ಈ ಯುದ್ಧದ ಪರಿಣಾಮಗಳು ಯಾವ ರೀತಿ ಆಗಬಹುದು ಎಂಬುದನ್ನು ವಿಶ್ಲೇಷಿಸಲು ಮತ್ತು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ರೂಪಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.
ಹಾರ್ಮುಜ್ ಜಲಸಂಧಿ ಸಂಕಷ್ಟ
ಈ ಸಭೆಯಲ್ಲಿ ವಿಶ್ವದ ಅತಿದೊಡ್ಡ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಸ್ಥಿತಿಯ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಈ ಜಲಸಂಧಿಯ ಮೂಲಕವೇ ಭಾರತವು ತನ್ನ ಅಗತ್ಯದ ಶೇಕಡಾ 65 ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹಾರ್ಮುಜ್ ಜಲಸಂಧಿಯು ಸಂಪೂರ್ಣವಾಗಿ ಬಂದ್ ಆದರೆ ಅಥವಾ ಸಂಚಾರಕ್ಕೆ ತೊಂದರೆಯಾದರೆ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಪೂರ್ವ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ.
ಸದ್ಯಕ್ಕೆ ಹಾರ್ಮುಜ್ ಜಲಸಂಧಿ ಭಾರತಕ್ಕೆ ಮುಕ್ತವಾಗಿದ್ದು, ಅಗತ್ಯ ವಸ್ತುಗಳ ಆಮದು ಸಾಮಾನ್ಯವಾಗಿ ಮುಂದುವರೆದಿದೆ. ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಯುದ್ಧದ ಪರಿಣಾಮ ಮತ್ತು ಪರ್ಯಾಯ ಕ್ರಮಗಳು
ಈ ಸಭೆಯಲ್ಲಿ ಮುಖ್ಯವಾಗಿ ತೈಲ, ಅನಿಲ, ರಸಗೊಬ್ಬರ ಮತ್ತು ಇತರೆ ಅಗತ್ಯ ವಸ್ತುಗಳ ಲಭ್ಯತೆ ಮತ್ತು ಬೆಲೆ ಏರಿಕೆಯ ಕುರಿತು ಗಂಭೀರ ಚರ್ಚೆ ನಡೆಯಲಿದೆ. ಪಶ್ಚಿಮ ಏಷ್ಯಾ ಸಂಘರ್ಷವು ದೀರ್ಘಕಾಲ ಎಳೆದರೆ ಈ ವಸ್ತುಗಳ ಪೂರೈಕೆಯಲ್ಲಿ ಉಂಟಾಗಬಹುದಾದ ಅಡೆತಡೆಗಳನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಪರ್ಯಾಯ ಮಾರ್ಗಗಳ ಬಗ್ಗೆಯೂ ಚರ್ಚಿಸಲಾಗುವುದು.
ಭಾರತದ ಬಳಿ ಇರುವ ತೈಲ ಮೀಸಲು ನಿಕ್ಷೇಪಗಳು, ಇತರೆ ದೇಶಗಳಿಂದ ತೈಲ ಆಮದು ಮಾಡಿಕೊಳ್ಳುವ ಸಾಧ್ಯತೆಗಳು, ಹಾಗೂ ದೇಶೀಯ ಇಂಧನ ಉತ್ಪಾದನೆಯನ್ನು ಹೆಚ್ಚಿಸುವ ಕುರಿತು ಈ ಸಭೆಯಲ್ಲಿ ಮಾತುಕತೆ ನಡೆಯಲಿದೆ. ಅಲ್ಲದೆ, ರಸಗೊಬ್ಬರದ ಬೆಲೆ ಏರಿಕೆಯು ರೈತರ ಮೇಲೆ ಆಗುವ ಪರಿಣಾಮವನ್ನು ತಡೆಗಟ್ಟುವ ಕ್ರಮಗಳ ಬಗ್ಗೆಯೂ ಚರ್ಚಿಸಲಾಗುವುದು.
ಆದಷ್ಟು ಬೇಗ ಹೆಚ್ಚುವರಿ ಆಮದು
ಸಭೆಯಲ್ಲಿ ಭಾರತಕ್ಕೆ ಅಗತ್ಯವಿರುವ ಹೆಚ್ಚುವರಿ ವಸ್ತುಗಳನ್ನು ಆದಷ್ಟು ಬೇಗ ಆಮದು ಮಾಡಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪರಿಸ್ಥಿತಿ ಸಾಮಾನ್ಯವಾಗಿರುವಾಗಲೇ ಅಗತ್ಯವಿರುವ ತೈಲ, ಅನಿಲ, ರಸಗೊಬ್ಬರ ಸೇರಿದಂತೆ ಪ್ರಮುಖ ಸರಕುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಡಲು ಕೇಂದ್ರ ಸರ್ಕಾರ ರಾಜ್ಯಗಳ ಸಹಕಾರ ಪಡೆಯಲಿದೆ.
ಪ್ರಧಾನಿ ಮೋದಿ ಅವರು ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ರಕ್ಷಣಾ ಸಚಿವಾಲಯ ಮತ್ತು ಪೆಟ್ರೋಲಿಯಂ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸತತವಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಈಗ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ದೇಶವ್ಯಾಪಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸುವುದು ಕೇಂದ್ರದ ಯೋಜನೆಯಾಗಿದೆ.




