ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

ಕೈಗೊಳ್ಳಲಿರುವ (26)

ಇತ್ತೀಚಿನ ದಿನಗಳಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸೆಲ್ಫಿ ಶೈಲಿಯ ವಿಡಿಯೋಗಳನ್ನು ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಟ್ರೆಂಡಿಂಗ್‌ನಲ್ಲಿದ್ದಾರೆ. ಅವರ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫಾಲೋವರ್‌ಗಳ ಸಂಖ್ಯೆಯಲ್ಲೂ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತೊಂದು ಹೊಸ ಸೆಲ್ಫಿ ವಿಡಿಯೋವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುಮಾರು 2 ನಿಮಿಷ 26 ಸೆಕೆಂಡುಗಳ ಈ ವಿಡಿಯೋದಲ್ಲಿ ಪ್ರಧಾನಿ ಮೋದಿ, ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಸಂಸತ್ತಿನಲ್ಲಿ ಅಂಗೀಕಾರವಾಗಿರುವುದನ್ನು ಭಾರತದ ಶಿಕ್ಷಣ ವ್ಯವಸ್ಥೆಗೆ ಐತಿಹಾಸಿಕ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತಂದಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ರೀತಿಯ ರಾಜಿ ಇರುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

“ಯಾವುದೇ ಪೇಪರ್ ಮಾಫಿಯಾ, ಪ್ರಶ್ನೆಪತ್ರಿಕೆ ಸೋರಿಕೆ ಗ್ಯಾಂಗ್ ಅಥವಾ ದೇಶದ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಯಾವುದೇ ಶಕ್ತಿಯನ್ನು ಬಿಡುವ ಪ್ರಶ್ನೆಯೇ ಇಲ್ಲ” ಎಂದು ಪ್ರಧಾನಿ ಮೋದಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಕ್ರಮಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ‘ವಿಕಸಿತ ಭಾರತ’ ಕನಸನ್ನು ನನಸು ಮಾಡಲು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಅತ್ಯಗತ್ಯ ಎಂದು ಪ್ರಧಾನಿ ಹೇಳಿದ್ದಾರೆ. ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತದೆ ಎಂದು  ಭರವಸೆ ನೀಡಿದ್ದಾರೆ.

ದಶಕಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಎದುರಿಸುತ್ತಲೇ ಬಂದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಠಿಣ ಕಾನೂನು ಅಗತ್ಯವಾಗಿತ್ತು ಎಂದು ಮೋದಿ ಹೇಳಿದ್ದಾರೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ವಿಧೇಯಕವನ್ನು ಮಂಡಿಸಿತು. ಈ ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವ್ಯಾಪಕ ಚರ್ಚೆಗಳು ನಡೆದಿದ್ದು, ವಿವಿಧ ಪಕ್ಷಗಳ ಸಂಸದರ ಅಭಿಪ್ರಾಯಗಳನ್ನು ಪರಿಗಣಿಸಿ ವಿಧೇಯಕವನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಫಾಸ್ಟ್-ಟ್ರ್ಯಾಕ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ ಶಿಕ್ಷಣ ತಜ್ಞರು, ಪರೀಕ್ಷಾ ಸಂಸ್ಥೆಗಳು ಹಾಗೂ ವಿವಿಧ ಪಾಲುದಾರರ ಸಲಹೆಗಳನ್ನು ಆಧರಿಸಿ ಸಾಂಸ್ಥಿಕ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದೀಗ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಇದಕ್ಕೂ ಮುನ್ನ ಲೋಕಸಭೆಯೂ ವಿಧೇಯಕವನ್ನು ಅಂಗೀಕರಿಸಿತ್ತು. ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತ ದೊರೆತ ಬಳಿಕ ಈ ಕಾನೂನು ಅಧಿಕೃತವಾಗಿ ಜಾರಿಗೆ ಬರಲಿದೆ.

Exit mobile version