ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿದ ಘಟನೆಗೆ ಬೆನ್ನಲ್ಲೇ ದೇಶದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ.
ರಾಹುಲ್ ಗಾಂಧಿ ಅವರು ಶನಿವಾರ ಮಹಾರಾಷ್ಟ್ರದ ಥಾಣೆಗೆ ತೆರಳುತ್ತಿದ್ದ ವೇಳೆ ಮುಂಬೈನ ಮುಲುಂಡ್ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಾನಹಾನಿ ಪ್ರಕರಣದ ಸಂಬಂಧ ಹೊಸ ಶೂರಿಟಿ ಒದಗಿಸಲು ಅವರು ಥಾಣೆ ನ್ಯಾಯಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಮುಲುಂಡ್ನಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ತಡೆದು ಘೋಷಣೆ ಕೂಗಿದರು.
ಪ್ರತಿಭಟನಾಕಾರರು “ಲಷ್ಕರ್-ಎ-ರಾಹುಲ್” ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೆಲವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ, ಎಐ ಶೃಂಗಸಭೆಯಲ್ಲಿ ನಡೆದ ಘಟನೆ ದೇಶದ ಮಾನ ಹಾನಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
ಇದಕ್ಕೂ ಮೊದಲು ಯುತ್ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ನಡೆದ ಎಐ ಶೃಂಗಸಭೆಗೆ ಶರ್ಟ್ ಧರಿಸದೆ ಪ್ರವೇಶಿಸಿ ಘೋಷಣೆಗಳನ್ನು ಕೂಗಿದ್ದರು. ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಿರುವುದನ್ನು ವಿರೋಧಿಸಿ ಅವರು ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದರು.
ಮೂಲಗಳ ಪ್ರಕಾರ, ಕೆಲವು ಕಾರ್ಯಕರ್ತರು ಪೂರ್ವಸಿದ್ಧತೆ ಮಾಡಿಕೊಂಡು QR ಕೋಡ್ಗಳ ಮೂಲಕ ಪ್ರವೇಶ ಪಡೆದಿದ್ದರು ಎಂದು ತಿಳಿದುಬಂದಿದೆ. ಘಟನೆಯ ನಂತರ ಪೊಲೀಸರು ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನ ಬಳಸಿ ಪ್ರತಿಭಟನಾಕಾರರನ್ನು ಗುರುತಿಸಿದ್ದಾರೆ. ಭದ್ರತಾ ಲೋಪದ ಕುರಿತು ತನಿಖೆ ಮುಂದುವರಿದಿದೆ.
ಈ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಕೃಷ್ಣ ಹರಿ, ಬಿಹಾರ ರಾಜ್ಯ ಕಾರ್ಯದರ್ಶಿ ಕುಂದನ್ ಯಾದವ್, ಉತ್ತರ ಪ್ರದೇಶ ಉಪಾಧ್ಯಕ್ಷ ಅಜಯ್ ಕುಮಾರ್ ಹಾಗೂ ರಾಷ್ಟ್ರೀಯ ಸಂಯೋಜಕ ನರಸಿಂಹ ಯಾದವ್ ಅವರನ್ನು ಬಂಧಿಸಿ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಘಟನೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು, ದೇಶದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಸೂರತ್, ಮುಂಬೈ, ಹೈದರಾಬಾದ್ ಸೇರಿದಂತೆ ಬಿಜೆಪಿ ಮತ್ತು ಯುವ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.





