ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತೊಂದು ಮಹತ್ವದ ಹಂತಕ್ಕೆ ತಲುಪಿದೆ.. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಮಾರ್ಚ್ 12ರಂದು ನಿಗದಿ ಮಾಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮೂಲ ಕಂಪನಿಯಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಬಂಧಿಸಿದ ಆಸ್ತಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆಂಬ ಆರೋಪದಡಿ ಈ ಪ್ರಕರಣ ಆರಂಭವಾಯಿತು. ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದಲ್ಲಿ ಆರಂಭವಾದ ಈ ಕೇಸ್ನಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಕಾಯ್ದೆಯಡಿ ತನಿಖೆ ನಡೆಸಿತ್ತು. ಇಡಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿಟ್ರೋಡಾ ಸೇರಿದಂತೆ ಇತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.
ಆದರೆ, ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಇಡಿ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಆದೇಶದಲ್ಲಿ ನ್ಯಾಯಾಲಯವು, ಈ ಪ್ರಕರಣ ಎಫ್ಐಆರ್ ಆಧಾರಿತವಲ್ಲದೆ ಖಾಸಗಿ ದೂರಿನ ಮೇಲೆ ಆರಂಭವಾಗಿದ್ದರಿಂದ ಪಿಎಂಎಲ್ಎ ಕಾಯ್ದೆಯಡಿ ಆರೋಪಪಟ್ಟಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದರಿಂದ ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು.
ಈ ಆದೇಶವನ್ನು ಪ್ರಶ್ನಿಸಿ ಇಡಿ ತಕ್ಷಣವೇ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆಯಲ್ಲಿ ಇಡಿ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಅವರು, ಇಡಿ ತನಿಖೆಯನ್ನು ಪೂರ್ಣಗೊಳಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿ ಹಲವು ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ ಎಂದು ವಾದಿಸಿದರು. ಕೆಳ ನ್ಯಾಯಾಲಯದ ಆದೇಶ ತಪ್ಪು ಎಂದು ಹೇಳಿದರು.
ವಾದ ಆಲಿಸಿದ ನ್ಯಾಯಮೂರ್ತಿ ರವೀಂದ್ರ ದುದೇಜಾ ಅವರಿದ್ದ ಏಕಸದಸ್ಯ ಪೀಠವು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್ ಕಂಪನಿ ಮತ್ತು ಇತರ ಪ್ರತಿವಾದಿಗಳಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಇಡಿ ಸಲ್ಲಿಸಿದ ಸ್ಟೇ ಅರ್ಜಿಯ ಮೇಲೂ ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ಪರಿಗಣಿಸಲು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.
ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ಸಲ್ಲಿಸಿದ್ದ ದೂರನ್ನು ವಿಚಾರಣೆಗೆ ತೆಗೆದುಕೊಳ್ಳುವ ಪ್ರಶ್ನೆಯನ್ನು ನ್ಯಾಯಾಲಯ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.
ಕೋರ್ಟ್ ಹೇಳಿದ್ದೇನು?
ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗೋ ಅವರು, ಈ ಪ್ರಕರಣದ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದರು. ಇಡಿ ಸಲ್ಲಿಸಿರುವ ದೂರು ಖಾಸಗಿ ದೂರಿನ ಆಧಾರದಲ್ಲಿದೆ, ಇದು ಪ್ರಥಮ ಮಾಹಿತಿ ವರದಿ (FIR) ಆಧಾರಿತವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
PMLA ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ಮುಂದುವರಿಸಲು, ಮೂಲ ಅಪರಾಧಕ್ಕೆ ಸಂಬಂಧಿಸಿದಂತೆ ಮಾನ್ಯ ಎಫ್ಐಆರ್ ಅಥವಾ ಸರಿಯಾದ ಕಾನೂನು ಪ್ರಕ್ರಿಯೆ ಇರಬೇಕು. ಆದರೆ, ಈ ಪ್ರಕರಣದಲ್ಲಿ ಆ ಮಾನದಂಡಗಳು ಪೂರೈಸಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಇಡಿ ಚಾರ್ಜ್ಶೀಟ್ಗೆ ಹಿನ್ನಡೆ
ಇಡಿ ತನ್ನ ಚಾರ್ಜ್ಶೀಟ್ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಕಂಪನಿಯ ಮೂಲಕ ಅಕ್ರಮವಾಗಿ ಆಸ್ತಿಗಳನ್ನು ವರ್ಗಾಯಿಸಿದ್ದಾರೆ ಎಂಬ ಆರೋಪ ಮಾಡಿತ್ತು. ಇಡಿ ಸಲ್ಲಿಸಿದ ದಾಖಲೆಗಳು ಹಾಗೂ ದೂರಿನ ಸ್ವರೂಪವನ್ನು ಪರಿಶೀಲಿಸಿದ ನ್ಯಾಯಾಲಯ, ಈ ಹಂತದಲ್ಲಿ ವಿಚಾರಣೆ ನಡೆಸಲು ಕಾನೂನು ಆಧಾರವಿಲ್ಲ ಎಂದು ತೀರ್ಮಾನಿಸಿದೆ.
ಕಾಂಗ್ರೆಸ್ ಪ್ರತಿಕ್ರಿಯೆ
ನ್ಯಾಯಾಲಯದ ಆದೇಶದ ಬಳಿಕ ಕಾಂಗ್ರೆಸ್ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಪಕ್ಷದ ನಾಯಕರು, “ಇದು ರಾಜಕೀಯ ದ್ವೇಷದ ಫಲವಾಗಿ ದಾಖಲಿಸಿದ ಪ್ರಕರಣ. ಸತ್ಯ ಮತ್ತು ಸಂವಿಧಾನ ಗೆದ್ದಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಈ ಆದೇಶವು ಇಡಿಗೆ ತಾತ್ಕಾಲಿಕ ಹಿನ್ನಡೆಯಾದರೂ, ಕಾನೂನು ಹೋರಾಟ ಇಲ್ಲಿ ಅಂತ್ಯವಾಗಿಲ್ಲ. ಇಡಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
