ಅಯೋಧ್ಯೆ: ರಾಮ ಮಂದಿರ ದೇಣಿಗೆ ವಿವಾದದ ಹಿನ್ನೆಲೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಸಲ್ಲಿಸಿದ್ದ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದ್ದು, ಶೀಘ್ರದಲ್ಲೇ ಹೊಸ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಭೆಯ ಬಳಿಕ ತಿಳಿಸಲಾಗಿದೆ.
ಇತ್ತೀಚೆಗೆ ರಾಮ ಮಂದಿರಕ್ಕೆ ಬಂದ ದೇಣಿಗೆಗಳ ನಿರ್ವಹಣೆ ಹಾಗೂ ಹಣಕಾಸು ಪಾರದರ್ಶಕತೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಉದ್ಭವಿಸಿದ್ದವು. ಈ ಬೆಳವಣಿಗೆಗಳ ನಡುವೆಯೇ ಚಂಪತ್ ರಾಯ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಟ್ರಸ್ಟ್ ಸಭೆಯಲ್ಲಿ ಅದನ್ನು ಅಂಗೀಕರಿಸಲಾಯಿತು. ಆದರೆ, ಅವರು ಟ್ರಸ್ಟ್ನ ಸದಸ್ಯರಾಗಿ ಮುಂದುವರಿಯಲಿದ್ದು, ದೇವಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಅನುಭವವನ್ನು ಮುಂದುವರಿಸಲಿದ್ದಾರೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.
ಚಂಪತ್ ರಾಯ್ ಅವರ ಸ್ಥಾನಕ್ಕೆ ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಬಜರಂಗ್ ಬಾಗ್ರಾ ಅವರನ್ನು ನೇಮಕ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ನಲ್ಕೊ ಸಂಸ್ಥೆಯ ಮಾಜಿ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿರುವ ಬಜರಂಗ್ ಬಾಗ್ರಾ ಅವರಿಗೆ ಆಡಳಿತ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಅನುಭವವಿದೆ.
ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?
ಈ ಸಭೆಯಲ್ಲಿ ಕೇವಲ ಪ್ರಧಾನ ಕಾರ್ಯದರ್ಶಿ ಬದಲಾವಣೆಯಷ್ಟೇ ಅಲ್ಲದೆ, ಟ್ರಸ್ಟ್ನ ಆಡಳಿತ ವ್ಯವಸ್ಥೆಯಲ್ಲಿಯೂ ಹಲವು ಸುಧಾರಣೆಗಳನ್ನು ತರಲು ಚರ್ಚೆ ನಡೆದಿದೆ. ಹುಂಡಿಗೆ ಬರುವ ನಗದು ದೇಣಿಗೆಯ ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ. ಇದೇ ವೇಳೆ ದೇವಾಲಯಕ್ಕೆ ಭಕ್ತರು ನೀಡುವ ಚಿನ್ನ, ಬೆಳ್ಳಿ ಹಾಗೂ ಇತರ ಅಮೂಲ್ಯ ದೇಣಿಗೆಗಳ ದಾಖಲೆ ಮತ್ತು ಲೆಕ್ಕಪತ್ರ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸುವ ಕುರಿತು ಸಹ ಚರ್ಚಿಸಲಾಗಿದೆ.
ಇದರ ಜೊತೆಗೆ ಟ್ರಸ್ಟ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದಲ್ಲಿ ಟ್ರಸ್ಟಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಟ್ರಸ್ಟ್ನ ಹಣಕಾಸು ಮತ್ತು ಆಡಳಿತದ ಮೇಲೆ ಬಲವಾದ ಹಿಡಿತ ಹೊಂದಿರುವ ಅನುಭವಿ ವ್ಯಕ್ತಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಪ್ರಧಾನ ಕಾರ್ಯದರ್ಶಿಯ ಹೆಸರನ್ನು ತಕ್ಷಣವೇ ಘೋಷಿಸುವ ಸಾಧ್ಯತೆ ಕಡಿಮೆ ಇದೆ. ವಿಶ್ವ ಹಿಂದೂ ಪರಿಷತ್ನ ದ್ವೈವಾರ್ಷಿಕ ರಾಷ್ಟ್ರೀಯ ಕಾರ್ಯಕಾರಿ ಸಭೆ ಜುಲೈ 19 ಮತ್ತು 20ರಂದು ನವದೆಹಲಿಯಲ್ಲಿ ನಡೆಯಲಿದ್ದು, ಆ ಸಭೆಯ ಬಳಿಕ ಜವಾಬ್ದಾರಿ ಹಸ್ತಾಂತರ ಸೇರಿದಂತೆ ಪ್ರಮುಖ ಸಾಂಸ್ಥಿಕ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.
ಇನ್ನೊಂದೆಡೆ, ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕೂಡ ತನ್ನ ಪ್ರತಿಕ್ರಿಯೆ ನೀಡಿದೆ. ಈ ಪ್ರಕರಣವನ್ನು “ದುರದೃಷ್ಟಕರ ಬೆಳವಣಿಗೆ” ಎಂದು ಬಣ್ಣಿಸಿರುವ ಸಂಘ, ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದವರ ವಿರುದ್ಧ ಯಾವುದೇ ರಾಜಿ ಇಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಪಾರದರ್ಶಕ ತನಿಖೆ ಮತ್ತು ಹೊಣೆಗಾರಿಕೆ ಅಗತ್ಯ ಎಂಬ ಸಂದೇಶವನ್ನು ಸಂಘ ನೀಡಿದೆ.
ಈ ವಿಚಾರದಲ್ಲಿ ಬಿಜೆಪಿ ಕೂಡ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ನೆಪ ಮಾಡಿಕೊಂಡು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಖಚಿತವಾಗಲಿದೆ ಎಂದು ಹೇಳಿರುವ ಬಿಜೆಪಿ, ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನ ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದೆ.





