ನವದೆಹಲಿ (ಜುಲೈ 24): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ರವನೀತ್ ಸಿಂಗ್ ಬಿಟ್ಟು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ಭಾರತದ ಸಂವಿಧಾನದ 75(2)ನೇ ವಿಧಿಯ ಅನ್ವಯ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.
ರಾಜ್ಯಸಭೆಯ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ರವನೀತ್ ಬಿಟ್ಟು ಅವರು 2024ರ ಆಗಸ್ಟ್ನಿಂದ 2026ರ ಜೂನ್ವರೆಗೆ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಂದ ತೆರವಾದ ಸ್ಥಾನಕ್ಕೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.
ರಾಜೀನಾಮೆ ಅಂಗೀಕಾರವಾದ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ರವನೀತ್ ಸಿಂಗ್ ಬಿಟ್ಟು, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದರು. ಮುಂದೆಯೂ ರಾಷ್ಟ್ರಸೇವೆ ಹಾಗೂ ‘ವಿಕಸಿತ ಭಾರತ’ ಪರಿಕಲ್ಪನೆಗಾಗಿ ಬದ್ಧನಾಗಿರುವುದಾಗಿ ಅವರು ತಿಳಿಸಿದ್ದಾರೆ.
ರಾಜಕೀಯ ವಲಯದಲ್ಲಿ ಬಿಟ್ಟು ಅವರ ರಾಜೀನಾಮೆಯನ್ನು ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಯ ತಯಾರಿಯ ಭಾಗವೆಂದು ಹೇಳಲಾಗುತ್ತಿದೆ. ಪಂಜಾಬ್ನಲ್ಲಿ ಬಿಜೆಪಿ ಸ್ವತಂತ್ರವಾಗಿ ಚುನಾವಣೆಯನ್ನು ಎದುರಿಸಲು ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ರವನೀತ್ ಬಿಟ್ಟು ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಂಜಾಬ್ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗನಾದ ರವನೀತ್ ಸಿಂಗ್ ಬಿಟ್ಟು, ಕಾಂಗ್ರೆಸ್ನಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದರು. 2024ರ ಲೋಕಸಭಾ ಚುನಾವಣೆಗೆ ಮುನ್ನ ಅವರು ಬಿಜೆಪಿ ಸೇರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಸೋಲು ಅನುಭವಿಸಿದ್ದರು.
2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದ ಬಳಿಕ, ಪಂಜಾಬ್ನಲ್ಲಿ ತನ್ನ ರಾಜಕೀಯ ನೆಲೆಯನ್ನು ವಿಸ್ತರಿಸಲು ಬಿಜೆಪಿ ಹೊಸ ತಂತ್ರ ರೂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆ ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
