1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಬಳಿಕ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಸಿಖ್ ಸಮುದಾಯದ ವಿರುದ್ಧ ಭೀಕರ ಹಿಂಸಾಚಾರ ಭುಗಿಲೆದ್ದಿತ್ತು. ದೆಹಲಿಯೊಂದರಲ್ಲೇ ಸುಮಾರು 3,000ಕ್ಕೂ ಹೆಚ್ಚು ಮಂದಿ ಈ ದಂಗೆಯಲ್ಲಿ ಮೃತಪಟ್ಟಿದ್ದರು. ಹಿಂಸಾಚಾರದ ಸಂದರ್ಭದಲ್ಲಿ ಹಲವು ಪ್ರದೇಶಗಳಲ್ಲಿ ಕೊಲೆ, ಲೂಟಿ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿಪಾಸ್ತಿಗಳ ನಾಶದಂತಹ ಘಟನೆಗಳು ನಡೆದಿದ್ದವು.
ದೆಹಲಿ ಪೊಲೀಸರ ತನಿಖೆಯ ಪ್ರಕಾರ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪ್ರಮುಖರಲ್ಲಿ ಸಜ್ಜನ್ ಕುಮಾರ್ ಕೂಡ ಒಬ್ಬರಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆದರೆ ದಂಗೆಯ ನಂತರದ ಆರಂಭಿಕ ಹಲವು ವರ್ಷಗಳಲ್ಲಿ ನಡೆದ ತನಿಖೆ ಹಾಗೂ ವಿಚಾರಣೆಗಳಲ್ಲಿ ಅವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲಾಗಿರಲಿಲ್ಲ. ಜಸ್ಟಿಸ್ ರಂಗನಾಥ್ ಮಿಶ್ರಾ ಆಯೋಗ ಸೇರಿದಂತೆ ಹಲವು ತನಿಖಾ ಸಮಿತಿಗಳ ವರದಿಗಳಲ್ಲೂ ಅವರ ಹೆಸರು ನೇರವಾಗಿ ಪ್ರಮುಖವಾಗಿ ಪ್ರಸ್ತಾಪವಾಗಿರಲಿಲ್ಲ.
2015ರಲ್ಲಿ ಕೇಂದ್ರ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ, ಹಿಂದೆ ಮುಚ್ಚಲಾಗಿದ್ದ ಪ್ರಕರಣಗಳನ್ನು ಮರುಪರಿಶೀಲಿಸಲು ಮುಂದಾದ ಬಳಿಕ ಸಜ್ಜನ್ ಕುಮಾರ್ ವಿರುದ್ಧದ ಪ್ರಕರಣಗಳು ಮತ್ತೊಮ್ಮೆ ಚುರುಕುಗೊಂಡವು. ಪಾಲಂ ಕಾಲೋನಿ ಪ್ರದೇಶದಲ್ಲಿ ಐವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 2018ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಬಳಿಕ ಸರಸ್ವತಿ ವಿಹಾರ್ನಲ್ಲಿ ಇಬ್ಬರು ಸಿಖ್ ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲೂ 2025ರಲ್ಲಿ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿನ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಈ ವರ್ಷದ ಆರಂಭದಲ್ಲಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.
ದೆಹಲಿ ರಾಜಕಾರಣದಲ್ಲಿ ಪ್ರಭಾವಿ ಜಾಟ್ ನಾಯಕರಾಗಿ ಗುರುತಿಸಿಕೊಂಡಿದ್ದ ಸಜ್ಜನ್ ಕುಮಾರ್ 1977ರಲ್ಲಿ ಕೌನ್ಸಿಲರ್ ಆಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1980ರಿಂದ ಮೂರು ಬಾರಿ ಹೊರ ದೆಹಲಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ 1984ರ ದಂಗೆಗೆ ಸಂಬಂಧಿಸಿದ ಆರೋಪಗಳು ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ 2009ರಲ್ಲಿ ಕಾಂಗ್ರೆಸ್ ಪಕ್ಷ ಅವರಿಗೆ ಲೋಕಸಭಾ ಟಿಕೆಟ್ ನೀಡಿರಲಿಲ್ಲ. ನಂತರ ಅವರು ರಾಜಕೀಯವಾಗಿ ಮೂಲೆಗುಂಪಾದರು.
ಇನ್ನು, ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲೂ ಸಜ್ಜನ್ ಕುಮಾರ್ ವಿರುದ್ಧ ಆರೋಪಗಳು ದಾಖಲಾಗಿದ್ದವು. ಜನಸಮೂಹವೊಂದು ಜಸ್ವಂತ್ ಸಿಂಗ್ ಹಾಗೂ ಅವರ ಮಗನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಲ್ಲದೆ, ಅವರ ಮನೆಯಲ್ಲಿದ್ದ ವಸ್ತುಗಳನ್ನು ಲೂಟಿ ಮಾಡಿ ಮನೆಗೆ ಬೆಂಕಿ ಹಚ್ಚಿತ್ತು. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು.
2021ರ ಡಿಸೆಂಬರ್ 16ರಂದು ಸಜ್ಜನ್ ಕುಮಾರ್ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು. ತನಿಖಾ ತಂಡದ ಪ್ರಕಾರ, ಹಿಂಸಾಚಾರ ನಡೆಸಿದ ಗುಂಪಿಗೆ ಅವರು ನೇತೃತ್ವ ವಹಿಸಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿದ್ದವು. 1984ರ ದಂಗೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹಲವು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಜ್ಜನ್ ಕುಮಾರ್ ಇದೀಗ ನಿಧನರಾಗಿದ್ದಾರೆ.





