ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Untitled design (27)

ಮುಂಬೈ, ಆ.13: ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ನಡೆದ ತಲ್ವಾರ್ ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮಾತಾ ಸಾಹಿಬ್ ಕೌರ್ ಗುರುದ್ವಾರದಲ್ಲಿ ಇಂದು ಗುರುವಾರ ನಡೆದ ದಾಳಿಯಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಕೈಗೆ ಗಾಯಗಳಾಗಿವೆ. ಪ್ರಾರ್ಥನೆ ಮುಗಿಸಿ ಪ್ರಸಾದದ ಹಾಲ್ ಕಡೆ ತೆರಳುತ್ತಿದ್ದ ವೇಳೆ ನಿಹಾಂಗ್ ಉಡುಪಿನಲ್ಲಿದ್ದ ವ್ಯಕ್ತಿಯೊಬ್ಬ ತಲ್ವಾರ್‌ನಿಂದ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

ಘಟನೆಯ ವೇಳೆ ಸುಖ್‌ಬೀರ್ ಅವರ ಪತ್ನಿ ಹಾಗೂ ಶಿರೋಮಣಿ ಅಕಾಲಿದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಕೂಡ ಗುರುದ್ವಾರದಲ್ಲೇ ಇದ್ದರು. ಗಾಯಗೊಂಡ ಬಾದಲ್ ಅವರನ್ನು ಕೂಡಲೇ ನಾಂದೇಡ್‌ನ ಯಶೋಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಹರ್‌ಸಿಮ್ರತ್ ಕೌರ್ ಅವರಿಗೆ ದೂರವಾಣಿ ಕರೆ ಮಾಡಿ ಸುಖ್‌ಬೀರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಸುಖ್‌ಬೀರ್ ಸಿಂಗ್ ಬಾದಲ್ ನಡುವಿನ ಭೇಟಿಯು ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಅಕಾಲಿದಳ ಮೈತ್ರಿ ಕುರಿತು ಊಹಾಪೋಹಗಳ ನಡುವೆ ನಡೆದಿದ್ದ ಆ ಭೇಟಿಯ ಬೆನ್ನಲ್ಲೇ ಈ ದಾಳಿ ನಡೆದಿರುವುದು ಗಮನ ಸೆಳೆದಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಬಾದಲ್ ಅವರಿಗೆ ಕರೆ ಮಾಡಿ ಕ್ಷೇಮ ವಿಚಾರಿಸಿದ್ದಾರೆ. ನಾಂದೇಡ್ ಎಸ್‌ಪಿ ಅವರಿಂದ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿರುವ ಅವರು, ದಾಳಿಯ ಹಿಂದಿನ ಉದ್ದೇಶ ಹಾಗೂ ಭದ್ರತಾ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಳಿಕೋರನನ್ನು ಜಸ್‌ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ನಿಹಾಂಗ್ ಸಿಖ್ ಸಮುದಾಯಕ್ಕೆ ಸೇರಿದವನಾಗಿದ್ದು, ಕಳೆದ ಎರಡು ವರ್ಷಗಳಿಂದ ಗುರುದ್ವಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ. ದಾಳಿಯನ್ನು ತಡೆಯಲು ಮುಂದಾದ ಇನ್ಸ್‌ಪೆಕ್ಟರ್ ಸಂತೋಷ್ ಕೇಂಗ್ರೆ ಅವರಿಗೂ ಗಾಯಗಳಾಗಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Exit mobile version