ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದ ವಿಜಯ್, ಇದೀಗ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.
ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭವ್ಯ ಸಮಾರಂಭದಲ್ಲಿ ವಿಜಯ್ ತಮಿಳುನಾಡಿನ ಒಂಬತ್ತನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಹಲವು ಗಣ್ಯರು ಭಾಗವಹಿಸಿದ್ದರು.
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ತಮ್ಮ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಪರವಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ತಿರುಚಿರಾಪಳ್ಳಿ ಪೂರ್ವ ಮತ್ತು ಪೆರಂಬೂರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು.
ತಿರುಚಿರಾಪಳ್ಳಿ ಪೂರ್ವ ಕ್ಷೇತ್ರದಲ್ಲಿ ವಿಜಯ್ ಒಟ್ಟು 91,381 ಮತಗಳನ್ನು ಪಡೆದು ಡಿಎಂಕೆ ಅಭ್ಯರ್ಥಿ ಎಸ್. ಇನಿಗೊ ಇರುದಯರಾಜ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಇನಿಗೊ ಇರುದಯರಾಜ್ ಅವರಿಗೆ 63,965 ಮತಗಳು ಲಭಿಸಿದ್ದವು. ಮತ್ತೊಂದೆಡೆ, ಪೆರಂಬೂರು ಕ್ಷೇತ್ರದಲ್ಲೂ ವಿಜಯ್ ಭರ್ಜರಿ ಪ್ರದರ್ಶನ ನೀಡಿದ್ದು, ಡಿಎಂಕೆಯ ಆರ್.ಡಿ. ಶೇಖರ್ ವಿರುದ್ಧ ಜಯ ಸಾಧಿಸಿದ್ದರು. ವಿಜಯ್ 1,20,365 ಮತಗಳನ್ನು ಪಡೆದರೆ, ಶೇಖರ್ 66,650 ಮತಗಳಿಗೆ ಸೀಮಿತರಾಗಿದ್ದರು.
ಇದೇ ವೇಳೆ ಟಿವಿಕೆ ಶಾಸಕ ಕರುಪ್ಪಯ್ಯ ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರುಪ್ಪಯ್ಯ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಸಹ ಉಪಸ್ಥಿತರಿದ್ದರು.
ಶೋಲವಂದನ್ ಕ್ಷೇತ್ರದಿಂದ ಗೆದ್ದಿರುವ ಕರುಪ್ಪಯ್ಯ ಮೊದಲು ಎಐಎಡಿಎಂಕೆ ಪಕ್ಷದಲ್ಲಿದ್ದರು. ಬಳಿಕ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿ ಇದೀಗ ಪ್ರಮುಖ ಜವಾಬ್ದಾರಿ ಹೊತ್ತಿದ್ದಾರೆ. ಟಿವಿಕೆ ಸರ್ಕಾರ ರಚನೆಯಾದ ಬೆನ್ನಲ್ಲೇ ಅವರಿಗೆ ಹಂಗಾಮಿ ಸ್ಪೀಕರ್ ಸ್ಥಾನ ನೀಡಿದ್ದಾರೆ.
