ನವದೆಹಲಿ, ಜುಲೈ 28: ಲೋಕಸಭೆಯ ಇಂದಿನ ಕಲಾಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಕೋಕ್ರೋಚ್ ಜನತಾ ಪಾರ್ಟಿ ನಡೆಸಿದ ನೀಟ್ (NEET) ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಶಿವಕುಮಾರ್ ಭಾಗವಹಿಸಿದ್ದನ್ನು ಉಲ್ಲೇಖಿಸಿದ ಅವರು, ಕರ್ನಾಟಕದಲ್ಲೇ ನಡೆಯುತ್ತಿರುವ KPSC ಪರೀಕ್ಷೆ ಸಂಬಂಧಿತ ವಿವಾದಗಳು ಮತ್ತು ಪ್ರತಿಭಟನೆಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದೇಕೆ? ಎಂದು ಪ್ರಶ್ನಿಸಿದರು.
ಮಾನ್ಯ ಮುಖ್ಯಮಂತ್ರಿಗಳೇ !
ದೆಹಲಿಗೆ ಬಂದು ನ್ಯಾಯದ ನಾಟಕವಾಡುವ ನಿಮಗೆ, ಕರ್ನಾಟಕದಲ್ಲಿ KPSC ಯನ್ನು ಬಟಾಬಯಲಾಗಿ ‘ಹರಾಜು ಮಾರುಕಟ್ಟೆ’ ಮಾಡಿರುವುದು ಅನ್ಯಾಯ ಅಂತ ಅನ್ನಿಸುವುದಿಲ್ಲವೇ ?
80 ಲಕ್ಷ ರೂಪಾಯಿ ಚೆಲ್ಲಿದವರಿಗೆ ಮಾತ್ರ ಸರ್ಕಾರಿ ಹುದ್ದೆ ಎನ್ನುವುದಾದರೆ, ಹಗಲಿರುಳು ಕಷ್ಟಪಟ್ಟು ಓದುವ ಬಡವರ ಮತ್ತು ಶ್ರಮಜೀವಿಗಳ ಮಕ್ಕಳ… pic.twitter.com/aFoLFNok1T
— Tejasvi Surya (@Tejasvi_Surya) July 28, 2026
ಲೋಕಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿದ ತೇಜಸ್ವಿ ಸೂರ್ಯ, “ಕರ್ನಾಟಕದ ಮುಖ್ಯಮಂತ್ರಿ ದೆಹಲಿಗೆ ಬಂದು ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಕರ್ನಾಟಕದಲ್ಲಿ KPSC ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಾವಿರಾರು ಯುವಕರು ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣಿಸುವುದಿಲ್ಲವೇ?” ಎಂದು ಪ್ರಶ್ನಿಸಿದರು.
ಅವರು ಮುಂದುವರೆದು, KPSCಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಗಂಭೀರ ಆರೋಪಗಳನ್ನು ಪ್ರಸ್ತಾಪಿಸಿದರು. ತಮ್ಮ ಇಬ್ಬರು ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಹಿನ್ನೆಲೆಯಲ್ಲಿ KPSC ಅಧ್ಯಕ್ಷರನ್ನು ಅಮಾನತುಗೊಳಿಸಲಾಗಿದೆ ಎಂದು ಉಲ್ಲೇಖಿಸಿದ ತೇಜಸ್ವಿ ಸೂರ್ಯ, ಈ ಪ್ರಕರಣದಿಂದ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ 80 ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ ಎಂದು ಹೇಳಿದರು.
“KPSC ಪರೀಕ್ಷೆಯಲ್ಲಿ ಅನ್ಯಾಯಕ್ಕೊಳಗಾದ ಸಾವಿರಾರು ಯುವಕರ ಧ್ವನಿಯಾಗುವುದು ನನ್ನ ಕರ್ತವ್ಯ. ನ್ಯಾಯ ಎಂಬುದು ಎಲ್ಲರಿಗೂ ಒಂದೇ ರೀತಿಯಾಗಿ ದೊರೆಯಬೇಕು. ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪರವಾಗಿ ನ್ಯಾಯ ಕೇಳುವ ಮುಖ್ಯಮಂತ್ರಿ, ಕರ್ನಾಟಕದ KPSC ಅಭ್ಯರ್ಥಿಗಳಿಗೂ ಅದೇ ರೀತಿಯ ನ್ಯಾಯ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ KPSC ನೇಮಕಾತಿ ಪ್ರಕ್ರಿಯೆ ಮತ್ತು ಪರೀಕ್ಷಾ ಪಾರದರ್ಶಕತೆ ಕುರಿತು ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದಿಂದ ಸಮಗ್ರ ತನಿಖೆ ಮತ್ತು ನ್ಯಾಯಯುತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.





