ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಯೋಧನೊಬ್ಬ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾರದಾ ಮಾತಾ ದೇವಸ್ಥಾನದ ಬಳಿ ಖೈರಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ವಿವರಗಳ ಪ್ರಕಾರ, ಉಧಂಪುರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಅತಿ ವೇಗದಲ್ಲಿ ಸಂಚರಿಸುತ್ತಿತ್ತು. ಇದೇ ವೇಳೆ ಎದುರುಗಡೆಯಿಂದ ಬರುತ್ತಿದ್ದ ಮೋಟಾರ್ ಸೈಕಲ್ಗೆ ಬಸ್ ಢಿಕ್ಕಿ ಹೊಡೆದಿದೆ. ಈ ಡಿಕ್ಕಿಯ ಪರಿಣಾಮ ಮೋಟಾರ್ ಸೈಕಲ್ ಚಾಲಕ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳೆಂದು ಗುರುತಿಸಲಾಗಿದೆ.
ಡಿಕ್ಕಿಯ ನಂತರ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಚಲಿಸಿದ್ದು, ಈ ವೇಳೆ ಬಸ್ಸಿನ ತುರ್ತು ಕಿಟಕಿಯಿಂದ ಇಬ್ಬರು ಪ್ರಯಾಣಿಕರು ಹೊರಗೆ ಬಿದ್ದಿದ್ದು. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇಬ್ಬರು ಮೃತರಲ್ಲಿ ಒಬ್ಬರು ರಜೆಯ ಮೇಲೆ ಮನೆಗೆ ತೆರಳುತ್ತಿದ್ದ CRPF ಯೋಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಗತ್ಯ ಚಿಕಿತ್ಸೆಗೆ ವಿಶೇಷ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ.
ಘಟನೆಯ ಮಾಹಿತಿ ಪಡೆದ ಕೂಡಲೇ ಸ್ಥಳೀಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ಇದಕ್ಕೂ ಮುನ್ನ ಕಳೆದ ವಾರ ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ್ದ ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಕಾರ್ಯಾಚರಣೆಗೆ ತೆರಳುತ್ತಿದ್ದ ಕ್ಯಾಸ್ಪಿರ್ ಎಂಬ ಗುಂಡು ನಿರೋಧಕ ಸೇನಾ ವಾಹನವು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಯೋಧರು ಗಾಯಗೊಂಡಿದ್ದರು.





