ಚೆನ್ನೈ/ಸೇಲಂ, ಫೆಬ್ರವರಿ 13: ತಮಿಳುನಾಡಿನ ಸೇಲಂ ನಗರದಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಭಾರೀ ಸಾರ್ವಜನಿಕ ರ್ಯಾಲಿ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ರ್ಯಾಲಿಯನ್ನು ನಟ ಹಾಗೂ ಪಕ್ಷದ ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಭಾರೀ ಬಿಸಿಲು ಮತ್ತು ಅಪಾರ ಜನಸಂದಣಿಯ ನಡುವೆ 37 ವರ್ಷದ ವ್ಯಕ್ತಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಬಳಿಕ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರಿಶೀಲಿಸಿದ ನಂತರ ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ ತಾಪಾಘಾತ (ಹೀಟ್ಸ್ಟ್ರೋಕ್) ಅಥವಾ ಹೃದಯಾಘಾತ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಸೂರಜ್ ಎಂದು ಗುರುತಿಸಲಾಗಿದೆ. ಅವರು ಮೂಲತಃ ಮಹಾರಾಷ್ಟ್ರದವರಾಗಿದ್ದು, ಸೇಲಂನ ಸೆಪ್ಪೆಪೆಟ್ಟೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಬೆಳ್ಳಿ ಸಂಬಂಧಿತ ಕಾರ್ಮಿಕ ಕೆಲಸದಲ್ಲಿ ತೊಡಗಿದ್ದ ಅವರು ವಿವಾಹಿತರಾಗಿದ್ದು, ಪತ್ನಿ ಹಾಗೂ ಮಗು ಅವರನ್ನು ಅಗಲಿದ್ದಾರೆ.
ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಬಿಸಿಲಿನ ನಡುವೆಯೂ ಜನರು ದೀರ್ಘಕಾಲ ನಿಂತಿದ್ದರಿಂದ ಹಲವರು ಅಸ್ವಸ್ಥರಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲವರಿಗೆ ತಲೆ ಸುತ್ತು, ವಾಂತಿ, ದೇಹದ ಉಷ್ಣಾಂಶ ಏರಿಕೆ ಮುಂತಾದ ಸಮಸ್ಯೆಗಳು ಕಂಡುಬಂದಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಕರೂರಿನಲ್ಲಿ ವಿಜಯ್ ನಡೆಸಿದ ಮತ್ತೊಂದು ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 40 ಜನರು ಸಾವನ್ನಪ್ಪಿದ್ದರು. ಆ ಘಟನೆ ನಂತರವೂ ಜನಸಮೂಹ ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಚರ್ಚೆ ನಡೆದಿತ್ತು. ಇದೀಗ ಮತ್ತೆ ಸಂಭವಿಸಿರುವ ಸಾವು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಪೊಲೀಸರು ತನಿಖೆ
ಘಟನೆಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಿಖರ ಸಾವಿನ ಕಾರಣ ತಿಳಿಯಲು ವರದಿ ನಿರೀಕ್ಷಿಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕವೇ ತಾಪಾಘಾತವೇ ಅಥವಾ ಹೃದಯಾಘಾತವೇ ಅಂತಿಮ ಕಾರಣ ಎಂದು ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಟ, ಟಿವಿಕೆ ನಾಯಕ ವಿಜಯ್ ಕಾರ್ಯಕ್ರಮದಲ್ಲಿ ಭೀಕರ ದುರಂತ:33ಕ್ಕೂ ಹೆಚ್ಚು ಸಾ*ವು
ಚೆನ್ನೈ, ಸೆಪ್ಟೆಂಬರ್ 27: ತಮಿಳುನಾಡಿನ ಕರೂರ್ನಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದ ಬೃಹತ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ 33 ಜನಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 55ಕ್ಕೂ ಹೆಚ್ಚು ಜನ ಅಸ್ವಸ್ತರಾಗಿದ್ದಾರೆ. ರಸ್ತೆಯ ಉದ್ದಗಲಕ್ಕೂ ಹರಡಿದ್ದ ಹತ್ತಾರು ಸಾವಿರ ಜನರ ಸಮೂಹದಲ್ಲಿ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ.
ಘಟನೆ ಸಂಭವಿಸಿದಾಗ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ, “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ಕರೆ ಮಾಡಿದ್ದಾರೆ. “ಯಾರೂ ಗಾಬರಿಯಾಗಬೇಡಿ, ಈಗ ಆ್ಯಂಬುಲೆನ್ಸ್ ಬರುತ್ತದೆ” ಎಂದು ಅವರು ಮೈಕ್ ಮೂಲಕ ಜನತೆಯನ್ನು ಶಾಂತಪಡಿಸಲು ಪ್ರಯತ್ನಿಸಿದ್ದಾರೆ. ವಿಜಯ್ ಅವರು ತುರ್ತಾಗಿ ಆ್ಯಂಬುಲೆನ್ಸ್ ಸೇವೆಗಳನ್ನು ಏರ್ಪಡಿಸಿ, ಮೂರ್ಛತಪ್ಪಿದ ಜನರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕರೂರ್ನಲ್ಲಿ ನಡೆದ ಈ ರ್ಯಾಲಿಯು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ್ ಅವರ ಪ್ರಚಾರದ ಭಾಗವಾಗಿತ್ತು. ರ್ಯಾಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು, ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಪರಿಸ್ಥಿತಿ ಉಂಟಾಗಿದೆ.
ದುರ್ಘಟನೆಯ ನಂತರ ವಿಜಯ್ ಅವರು ಉಸಿರಾಟದ ತೊಂದರೆ ಅನುಭವಿಸುತ್ತಿರುವ ಜನರಿಗೆ ನೀರು ವಿತರಿಸಲು ಮತ್ತು ಆಂಬ್ಯುಲೆನ್ಸ್ ಸೇವೆಗಳನ್ನು ಸಂಘಟಿಸಲು ಮುಂದಾದರು. ಅಗತ್ಯವಿರುವವರನ್ನು ತಲುಪಲು ತುರ್ತು ಆಂಬ್ಯುಲೆನ್ಸ್ಗಳಿಗೆ ದಾರಿ ಮಾಡಿಕೊಡುವಂತೆ ತಮ್ಮ ಬೆಂಬಲಿಗರನ್ನು ಅವರು ಒತ್ತಾಯಿಸಿದರು.
ಪೊಲೀಸರು ಇನ್ನೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಗಾಯಗಾರರ ಚಿಕಿತ್ಸೆ ನಡೆಸಲಾಗುತ್ತಿದೆ. ಮೃತರ ವಿವರಗಳನ್ನು ದಾಖಲಿಸಲಾಗುತ್ತಿದೆ ಮತ್ತು ಗುರುತಿಸಲಾಗುತ್ತಿದೆ.
