ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ ವಿರುದ್ಧ ರಾಜ್ಯಪಾಲ ಆರ್.ಎನ್. ರವಿ ಕಠಿಣ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯಪಾಲರ ಈ ಆದೇಶವು ಮೇ 07, 2026ರಿಂದ ಜಾರಿಗೆ ಬರುವಂತೆ ಪ್ರಕಟವಾಗಿದ್ದು, ಇದರೊಂದಿಗೆ ಬಂಗಾಳ ಸಚಿವ ಸಂಪುಟವೂ ವಿಸರ್ಜನೆಯಾಗಿದೆ. ಮಮತಾ ಬ್ಯಾನರ್ಜಿ ಇನ್ನು ಮುಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭಾರೀ ಹಿನ್ನಡೆ ಅನುಭವಿಸಿದ್ದು, ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದೆ. ಒಟ್ಟು 294 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಈ ಫಲಿತಾಂಶದ ನಂತರ ಬಂಗಾಳದಲ್ಲಿ ಅಧಿಕಾರ ಬದಲಾವಣೆಯ ರಾಜಕೀಯ ಚಟುವಟಿಕೆಗಳು ವೇಗವಾಗಿ ಮುಂದುವರೆಯುತ್ತಿವೆ.
ಆದರೆ ಚುನಾವಣಾ ಫಲಿತಾಂಶಗಳ ಬಳಿಕವೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತೊರೆಯಲು ನಿರಾಕರಿಸಿದ್ದರು. “ನಾನು ಸೋತಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಅವರು ಬಹಿರಂಗವಾಗಿ ಘೋಷಿಸಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂವಿಧಾನಿಕ ಚರ್ಚೆಗೆ ಕಾರಣವಾಗಿತ್ತು.
ಸಾಂವಿಧಾನಿಕವಾಗಿ ಯಾವುದೇ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಬಹುಮತದ ವಿಶ್ವಾಸ ಹೊಂದಿರುವವರೆಗೆ ಮಾತ್ರ ಅಧಿಕಾರದಲ್ಲಿರಲು ಸಾಧ್ಯ. ಚುನಾವಣಾ ಫಲಿತಾಂಶಗಳು ಮತ್ತೊಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ನಂತರ, ಆಡಳಿತದಲ್ಲಿರುವ ಸರ್ಕಾರ ಮುಂದುವರಿಯಲು ನೈತಿಕ ಮತ್ತು ರಾಜಕೀಯ ಹಕ್ಕು ಕಳೆದುಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರ ಪಾತ್ರ ಅತ್ಯಂತ ಮಹತ್ವ ಪಡೆಯುತ್ತದೆ.
ರಾಜ್ಯಪಾಲರು ಸಂವಿಧಾನದ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಾರೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಯಾಗುವಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ. ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದೇ ಮುಂದುವರಿದ ಹಿನ್ನೆಲೆ ರಾಜ್ಯಪಾಲ ಆರ್.ಎನ್. ರವಿ ಮಧ್ಯಪ್ರವೇಶಿಸಿ ವಿಧಾನಸಭೆ ವಿಸರ್ಜನೆಗೆ ಆದೇಶ ನೀಡಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ತೀವ್ರತೆ ನಿರ್ಮಾಣವಾಗಿದೆ. ಬಿಜೆಪಿ ಶೀಘ್ರದಲ್ಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಹೆಚ್ಚಿದೆ.





