ಅಯೋಧ್ಯೆ ಸೆ.8: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ. 8,000ರಿಂದ ರೂ.12,000ಕ್ಕೆ, ಸಹಾಯಕಿಯರ ಗೌರವಧನವನ್ನು ರೂ. 4,000ರಿಂದ ರೂ.6,000ಕ್ಕೆ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.
ಅಯೋಧ್ಯೆ ಪ್ರವಾಸದ ವೇಳೆ ಇಂದು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೌರವಧನ ಹೆಚ್ಚಳದ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರೂ. 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸುವ ಯೋಜನೆಯನ್ನು ಘೋಷಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸೀರೆಗಳನ್ನು ವಿತರಿಸಲಾಯಿತು. ಇದೇ ವೇಳೆ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು.
ರೂ. 12 ಸಾವಿರಕ್ಕೆ ಗೌರವಧನ ಹೆಚ್ಚಳ
ಪರಿಷ್ಕೃತ ವ್ಯವಸ್ಥೆಯಂತೆ ಉತ್ತರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ. 8 ಸಾವಿರದಿಂದ ರೂ.12 ಸಾವಿರಕ್ಕೆ ಏರಿಕೆಯಾಗಲಿದೆ. ಅದೇ ರೀತಿ ಅಂಗನವಾಡಿ ಸಹಾಯಕಿಯರ ಗೌರವಧನ ರೂ. 4 ಸಾವಿರದಿಂದ ರೂ. 6 ಸಾವಿರಕ್ಕೆ ಹೆಚ್ಚಳವಾಗಲಿದೆ.
ಮಕ್ಕಳ ಪೋಷಣೆ, ಮಹಿಳೆಯರ ಆರೋಗ್ಯ, ತಾಯಿ-ಮಗು ಕಲ್ಯಾಣ ಸೇರಿದಂತೆ ಹಲವು ಪ್ರಮುಖ ಸೇವೆಗಳಲ್ಲಿ ಅಂಗನವಾಡಿ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಈ ನಿರ್ಧಾರ ರಾಜ್ಯದ ಸಾವಿರಾರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರ್ಥಿಕವಾಗಿ ನೆರವಾಗಲಿದೆ.
ಮೇಲ್ವಿಚಾರಕರಿಗೆ ಸನ್ಮಾನ
ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುಟಾಣಿ ಮಕ್ಕಳಿಗೆ ಚಾಕೊಲೇಟ್ ವಿತರಿಸಿದರು. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಮೇಲ್ವಿಚಾರಕರಿಗೂ ಸನ್ಮಾನ ಮಾಡಲಾಯಿತು.
ಅಯೋಧ್ಯೆ ಪ್ರವಾಸದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಕರ್ತವ್ಯ ಹಾಗೂ ಜವಾಬ್ದಾರಿಗಳ ಮಹತ್ವವನ್ನು ಕೂಡ ಅವರು ತಿಳಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಿಬ್ಬಂದಿಗೆ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಘೋಷಣೆಗಳನ್ನು ಮಾಡಿದರು.





