ಪುಣೆ, ಮಾ.12: ಟಿ20 ವಿಶ್ವಕಪ್ ಗೆಲುವಿನ ಸಂಭ್ರಮದ ನಡುವೆ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ವಿವಾದದಲ್ಲಿ ಸಿಲುಕಿದ್ದಾರೆ. ವಿಜಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪುಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪಾಂಡ್ಯ ನಡೆ ಬಗ್ಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಅಹಮದಾಬಾದ್ನ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಳಿಕ ವಿಜಯೋತ್ಸವ ಆಚರಿಸಲಾಯಿತು. ಈ ಸಂಭ್ರಮದ ವೇಳೆ ಪಾಂಡ್ಯ ತಮ್ಮ ದೇಹದ ಸುತ್ತ ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಸಂಭ್ರಮಿಸುತ್ತಿರುವ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಇದೇ ಸಂದರ್ಭದಲ್ಲಿ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಕಿಸ್ಸಿಂಗ್ ಮಾಡುತ್ತಿರುವ ದೃಶ್ಯ ಕೂಡ ಗಮನ ಸೆಳೆದಿತ್ತು.
ಈ ಘಟನೆಗೆ ವಿರೋಧ ವ್ಯಕ್ತಪಡಿಸಿ ಪುಣೆಯ ವಕೀಲ ವಾಜಿದ್ ಖಾನ್ ಅವರು ಶಿವಾಜಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಾಂಡ್ಯ ವರ್ತನೆ ರಾಷ್ಟ್ರಧ್ವಜದ ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಷ್ಟ್ರೀಯ ಧ್ವಜವನ್ನು ಸುತ್ತಿಕೊಂಡು ಅಶ್ಲೀಲ ಅಥವಾ ಅನೌಚಿತ ವರ್ತನೆ ತೋರಿಸುವುದು ಕಾನೂನು ಪ್ರಕಾರ ಅಪರಾಧವಾಗಬಹುದು ಎಂದು ಅವರು ಹೇಳಿದ್ದಾರೆ.
ವಿಜಯೋತ್ಸವದ ಸಮಯದಲ್ಲಿ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆಗಿನ ಆತ್ಮೀಯ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಹಲವರು ಇದನ್ನು ಕೇವಲ ಸಂಭ್ರಮದ ಕ್ಷಣವೆಂದು ನೋಡಿದರೆ, ಕೆಲವರು ರಾಷ್ಟ್ರಧ್ವಜದ ಬಳಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವು ದೇಶದ ಗೌರವದ ಪ್ರತೀಕ. ಅದನ್ನು ಬಳಸುವಾಗ ನಿಯಮಗಳನ್ನು ಪಾಲಿಸಬೇಕು” ಎಂದು ಕೆಲ ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ವಿಜಯೋತ್ಸವದ ಸಂದರ್ಭದಲ್ಲಿ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯ ನಡುವೆ ಬಿರುಕು ಉಂಟಾಗಿದೆ ಎಂಬ ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರಕ್ಕೂ ಪಾಂಡ್ಯ ವೈಯಕ್ತಿಕ ಜೀವನವೇ ಕಾರಣ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ಅಭಿಮಾನಿಗಳು ಇಬ್ಬರು ಸಹೋದರರ ಸಾಮಾಜಿಕ ಜಾಲತಾಣ ಖಾತೆಗಳನ್ನು ಗಮನಿಸಿದಾಗ, ಇತ್ತೀಚಿನ ದಿನಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಳ್ಳುವ ಪೋಸ್ಟ್ಗಳು ಕಾಣಿಸದೇ ಇರುವುದನ್ನು ಸೂಚಿಸಿದ್ದಾರೆ. ಇದೇ ಕಾರಣದಿಂದ ಇಬ್ಬರ ನಡುವಿನ ಸಂಬಂಧದಲ್ಲಿ ಅಂತರ ಉಂಟಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ.
2026ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಅಹಮದಾಬಾದ್ನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಕಾಣಿಸದೇ ಇರುವುದೂ ಈ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ. ಜೊತೆಗೆ ಕೃನಾಲ್ ಪಾಂಡ್ಯ ತಮ್ಮ ಸಹೋದರನ ಗೆಲುವಿಗೆ ಸಂಬಂಧಿಸಿದ ಯಾವುದೇ ಅಭಿನಂದನಾ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿಲ್ಲ ಎಂಬುದೂ ಅಭಿಮಾನಿಗಳ ಗಮನ ಸೆಳೆದಿದೆ.





