ನವದೆಹಲಿ: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026ರ ಐಸಿಸಿ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಶನಿವಾರ ಅಧಿಕೃತವಾಗಿ ಪ್ರಕಟಿಸಿದೆ. ಆಶ್ಚರ್ಯವೆಂದರೆ ತಂಡದ ಉಪನಾಯಕರಾಗಿದ್ದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟು, ಅವರ ಬದಲಿಗೆ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್-ಬ್ಯಾಟರ್ಗಳನ್ನ ಆಯ್ಕೆ ಮಾಡಿಕೊಂಡಿದ್ದಾರೆ
ಗಿಲ್ ಕೈಬಿಡಲು ಅಸಲಿ ಕಾರಣವೇನು?
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಗಿಲ್ ಅವರನ್ನು ಕೈಬಿಟ್ಟಿದ್ದಕ್ಕೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್, ಶುಭಮನ್ ಗಿಲ್ ಅವರ ಸಾಮರ್ಥ್ಯದ ಬಗ್ಗೆ ನಮಗೆ ಎರಡನೇ ಮಾತಿಲ್ಲ. ಅವರು ವಿಶ್ವದರ್ಜೆಯ ಆಟಗಾರ. ಆದರೆ ಇತ್ತೀಚಿನ ದಿನಗಳಲ್ಲಿ ಟಿ20 ಮಾದರಿಯಲ್ಲಿ ಅವರಿಂದ ನಿರೀಕ್ಷಿತ ರನ್ ಬಂದಿಲ್ಲ. ಅಷ್ಟೇ ಅಲ್ಲದೆ, ನಾವು ತಂಡದ ಸಮತೋಲನದ ದೃಷ್ಟಿಯಿಂದ ವಿಭಿನ್ನ ಸಂಯೋಜನೆಯನ್ನು ಪ್ರಯತ್ನಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ತಂಡದ ಬ್ಯಾಟಿಂಗ್ ಕ್ರಮಾಂಕದ ಅಗ್ರಸ್ಥಾನದಲ್ಲಿ ಒಬ್ಬ ವಿಕೆಟ್ ಕೀಪರ್ ಬ್ಯಾಟರ್ ಬೇಕು ಎಂಬ ತಾಂತ್ರಿಕ ಕಾರಣದಿಂದಾಗಿ ಗಿಲ್ ಅವರು ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಅಗರ್ಕರ್ ವಿವರಿಸಿದ್ದಾರೆ.
ನಾಯಕ ಸೂರ್ಯಕುಮಾರ್ ಯಾದವ್ ಬೆಂಬಲ
ತಂಡದ ಆಯ್ಕೆಯ ಬಗ್ಗೆ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಇದು ವೈಯಕ್ತಿಕ ಫಾರ್ಮ್ಗಿಂತ ಹೆಚ್ಚಾಗಿ ತಂಡದ ಅಗತ್ಯತೆಗೆ ಸಂಬಂಧಿಸಿದ ನಿರ್ಧಾರವಾಗಿದೆ. ಆರಂಭಿಕ ಆಟಗಾರರಾಗಿ ವಿಕೆಟ್ ಕೀಪಿಂಗ್ ಮಾಡುವ ಆಟಗಾರ ತಂಡಕ್ಕೆ ಹೆಚ್ಚು ಪ್ಲಸ್ ಪಾಯಿಂಟ್ ನೀಡುತ್ತಾರೆ. ರಿಂಕು ಸಿಂಗ್ ಮತ್ತು ವಾಷಿಂಗ್ಟನ್ ಸುಂದರ್ ಅಂತಹ ಆಟಗಾರರ ಸೇರ್ಪಡೆಯಿಂದ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಆಳ ಹೆಚ್ಚಿದೆ ಎಂದು ಗಿಲ್ ಅವರ ಹೊರಬರುವಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
2026ರ ಟಿ20 ವಿಶ್ವಕಪ್ಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್.





