ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಆಯೋಜಕ ಅರೆಸ್ಟ್, ಮಮತಾ ಬ್ಯಾನರ್ಜಿ ಕ್ಷಮೆಯಾಚನೆ

Untitled design 2025 12 13T160155.833

ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಕಾರ್ಯಕ್ರಮದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪ್ರಮುಖ ಆಯೋಜಕರಾದ ಸತಾದ್ರು ದತ್ತ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಸೇರಿದ್ದರು. ಮೆಸ್ಸಿಯನ್ನು ನೇರವಾಗಿ ನೋಡುವ ಉತ್ಸಾಹದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು.

ಲಿಯೋನೆಲ್ ಮೆಸ್ಸಿ ರಾತ್ರಿ 11 ಗಂಟೆಯೊಳಗೆ ಕ್ರೀಡಾಂಗಣದಲ್ಲಿ ಆಗಮಿಸುವ ನಿರೀಕ್ಷೆಯಿತ್ತು. ಆದರೆ ಭದ್ರತಾ ಹಾಗೂ ಸಮಯದ ಅಸಮರ್ಪಕ ಯೋಜನೆಯ ಕಾರಣದಿಂದ ಮೆಸ್ಸಿ ಕ್ರೀಡಾಂಗಣದಲ್ಲಿ ಸ್ವಲ್ಪ ಸಮಯ ಮಾತ್ರ ಉಳಿದು ಬೇಗನೆ ನಿರ್ಗಮಿಸಿದರು. ಇದರಿಂದಾಗಿ ಹೆಚ್ಚಿನ ಅಭಿಮಾನಿಗಳಿಗೆ ಮೆಸ್ಸಿಯನ್ನು ನೇರವಾಗಿ ನೋಡಲು ಅವಕಾಶ ಸಿಗಲಿಲ್ಲ. ಈ ವಿಷಯವೇ ದಾಂಧಲೆಗೆ ಕಾರಣವಾಯಿತು.

ಕೋಪಗೊಂಡ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಬ್ಯಾನರ್‌ಗಳನ್ನು ಹರಿದು ಹಾಕಿ, ಆಸನಗಳನ್ನು ಧ್ವಂಸಗೊಳಿಸಿದರು. ಕೆಲ ಸಮಯ ಕ್ರೀಡಾಂಗಣದ ಒಳಭಾಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದರು. ಘಟನೆಯಲ್ಲಿ ಕೆಲವರಿಗೆ ಸಣ್ಣ ಗಾಯಗಳಾಗಿವೆ ಎನ್ನಲಾಗಿದೆ.

ಈ ಘಟನೆಯ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಭಿಮಾನಿಗಳು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದರು. ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸುವುದಾಗಿ ಭರವಸೆ ನೀಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವಿಶೇಷ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಘೋಷಿಸಿದರು.

ಬಂಧಿತರಾಗಿರುವ ಸತಾದ್ರು ದತ್ತ ಅವರು ‘ಸತಾದ್ರು ದತ್ತ ಉಪಕ್ರಮ’ದ ಅಡಿಯಲ್ಲಿ ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರು. ಟಿಕೆಟ್ ಮಾರಾಟ, ಪ್ರವೇಶ ವ್ಯವಸ್ಥೆ, ಭದ್ರತೆ ಹಾಗೂ ಕಾರ್ಯಕ್ರಮದ ಸಮಯ ನಿರ್ವಹಣೆಯಲ್ಲಿ ಗಂಭೀರ ಲೋಪಗಳಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದೇ ವೇಳೆ, ಲಿಯೋನೆಲ್ ಮೆಸ್ಸಿ ಅವರು ತಮ್ಮ ತಂಡದ ಸಹ ಆಟಗಾರರಾದ ಲೂಯಿಸ್ ಸುವಾರಜ್ ಹಾಗೂ ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಬೆಳಗಿನ ಜಾವ ಕೋಲ್ಕತ್ತಾಗೆ ಆಗಮಿಸಿದ್ದರು. ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು ಮೈದಾನಕ್ಕೆ ಗೌರವ ಸಲ್ಲಿಸಿ ಅಭಿಮಾನಿಗಳಿಗೆ ಕೈಬೀಸಿದರು. ಆದರೆ ನಿರೀಕ್ಷೆಗಿಂತ ಬೇಗ ಹೊರಟುಹೋಗಿದ್ದರಿಂದ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿತು.

Exit mobile version